Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಮಂಗಳೂರು-ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75ನ್ನು ಮತ್ತೆ ಬಂದ್ ಮಾಡಲು ಹಾಸನ ಜಿಲ್ಲಾಡಳಿತಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
10 ಕಿ. ಮೀ. ರಸ್ತೆ ನಿರ್ಮಾಣಕ್ಕಾಗಿ 6 ತಿಂಗಳು ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲು ಟೆಂಡರ್ ಪಡೆದಿರುವ ರಾಜ್ ಕಮಲ್ ಕಂಪನಿ ಜಿಲ್ಲಾಡಳಿತಕ್ಕೆ ಮನವಿ ಮಾಡಿದೆ.
ಹೆದ್ದಾರಿ ಬಂದ್ ವಿಚಾರ ಸುದ್ದಿಯಾಗಯತ್ತಿದ್ದಂತೆಯೇ ಹಾಸನ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆದ್ದಾರಿ ಬಂದ್ ಮಾಡಿದರೆ ಉಗ್ರ ಹೋರಾಟ ಮಾಡುವ ಎಚ್ಚರಿಕೆಯನ್ನು ನೀಡಿದ್ದಾರೆ. ಬಂದರು ನಗರಿ ಮತ್ತು ರಾಜ್ಯ ರಾಜಧಾನಿಯ ಸಂಪರ್ಕಿಸುವ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ಬಂದ್ ಆಗುವ ಸಾಧ್ಯತೆಗಳು ಹೆಚ್ಚಾಗಿವೆ.
ಕೆಲ ವರ್ಷಗಳಿಂದ ಹಾಸನದಿಂದ ಸಕಲೇಶಪುರವರೆಗಿನ ಚತುಷ್ಪಥ ರಸ್ತೆ ಕಾಮಗಾರಿ ನಡೆಯುತ್ತಿದ್ದು ಇನ್ನು ಆಮೆಗತಿಯಲ್ಲಿ ಸಾಗುತ್ತಿದೆ. ಈ ಕಾಮಗಾರಿ ಮೇ ಅಂತ್ಯದೊಳಗೆ ಪೂರ್ಣಗೊಳಿಸೋದಾಗಿ ಟೆಂಡರ್ ವಹಿಸಿಕೊಂಡ ಕಂಪನಿ ಜಿಲ್ಲಾಡಳಿತಕ್ಕೆ ಭರವಸೆ ನೀಡಿದೆ.