Publish Date: Wed, 04 Aug 2021 (16:39 IST)
Updated Date: Wed, 04 Aug 2021 (16:41 IST)
ಬೆಂಗಳೂರು: ರಾಜ್ಯಾದ್ಯಂತ ಹಲವು ದಿನಗಳಿಂದ ಇಳಿಮುಖವಾಗಿದ್ದ ಮಳೆಯ ಪ್ರಮಾಣ ಬುಧವಾರ ಮತ್ತೆ ಏರಿಕೆಯಾಗಿದೆ. ಆಗಸ್ಟ್ 5ರಿಂದ 8ರವರೆಗೆ ರಾಜ್ಯದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 6ರವರೆಗೆ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನಲ್ಲಿ ಬುಹುತೇಕ ಎಲ್ಲ ಸ್ಥಳಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆ ಮಾತ್ರ ಮ
ಳೆಯಾಗುವ ಹೆಚ್ಚಿನ ಸಾಧ್ಯತೆಯಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಆಗಸ್ಟ್ 5 ಮತ್ತು 6ರಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ.
ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದ್ದು, ಗರಿಷ್ಠ ಉಷ್ಣಾಂಶ 29 ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ಬುಧವಾರ ನೈರುತ್ಯ ಮುಂಗಾರು ಚುರುಕಾಗಿತ್ತು. ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯ ಹಾಗೂ ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದ್ದು. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಬಹುತೇಕ ಎಲ್ಲ ಸ್ಥಳಗಳಲ್ಲಿ ಮಳೆಯಾಗಿದೆ.
ಹಲವೆಡೆ ಭಾರಿ ಮಳೆ:
ಉಡುಪಿಯ ಸಿದ್ದಾಪುರ ಮತ್ತು ಶಿವಮೊಗ್ಗದ ಆಗುಂಬೆಯಲ್ಲಿ ತಲಾ 15 ಸೆಂ.ಮೀ., ದಕ್ಷಿಣ ಕನ್ನಡದ ಸುಬ್ರಹ್ಮಣ್ಯದಲ್ಲಿ 13 ಸೆಂ.ಮೀ., ಶಿವಮೊಗ್ಗದ ತುಮರಿಯಲ್ಲಿ 12 ಸೆಂ.ಮೀ., ಶಿರಾಲಿಯಲ್ಲಿ 10 ಸೆಂ.ಮೀ., ಲಿಂಗನಮಕ್ಕಿ, ತೀರ್ಥಹಳ್ಳಿ, ಭಟ್ಕಳ, ಕೋಟದಲ್ಲಿ ತಲಾ 9 ಸೆಂ.ಮೀ., ಹೊನ್ನಾವರ, ಉತ್ತರ ಕನ್ನಡದ ಸಿದ್ದಾಪುರ, ಮಂಕಿ, ತಾಳಗುಪ್ಪ, ಚಿಕ್ಕಮಗಳೂರಿನ ಜಯಪುರ ಹಾಗೂ ಕೊಡಗಿನ ಸಂತಹಳ್ಳಿಯಲ್ಲಿ ತಲಾ 7 ಸೆಂ.ಮೀ., ಮಳೆಯಾಗಿದೆ ಎಂದು ಮಹಿತಿ ನೀಡಿದ್ದಾರೆ.