Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ರಾಜ್ಯದಲ್ಲಿ ಶಾಲೆಯಿಂದ ಹೊರಗುಳಿದಿರುವ 14 ವರ್ಷದೊಳಗಿನ 10.12 ಲಕ್ಷ ಮಕ್ಕಳನ್ನು ವಾಪಸ್ ಕರೆತರುವ ನಿಟ್ಟಿನಲ್ಲಿ ಹೈಕೋರ್ಟ್ ರಚಿಸಿರುವ ಉನ್ನತಾಧಿಕಾರ ಸಮಿತಿ ಜುಲೈ 16 ರಂದು ಸಭೆ ನಡೆಸಿ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ತಿಳಿಸಲು ಹೈಕೋರ್ಟ್ ನಿರ್ದೇಶಿಸಿದೆ.
ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಕರೆ ತರುವ ವಿಚಾರವಾಗಿ 2013ರಲ್ಲಿ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಆಲೋಕ್ ಆರಾಧೆ ಹಾಗೂ ನ್ಯಾ. ಜೆ.ಎಂ. ಖಾಜಿ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ರಾಜ್ಯದಲ್ಲಿ 14 ವರ್ಷದೊಳಗಿನ 10 ಲಕ್ಷಕ್ಕೂ ಹೆಚ್ಚು ಮಕ್ಕಳು ಶಾಲೆ ಮತ್ತು ಅಂಗನವಾಡಿಗಳಿಂದ ಹೊರಗುಳಿದಿದ್ದಾರೆ ಎಂಬುದಾಗಿ ಅಮೈಕಸ್ ಕ್ಯೂರಿ(ಪ್ರಕರಣದಲ್ಲಿ ನೆರವುಗಾರ) ವರದಿ ಸಲ್ಲಿಸಿದರು. ವರದಿಯನ್ನು ದಾಖಲಿಸಿಕೊಂಡ ನ್ಯಾಯಪೀಠ, ಶಾಲೆಯಿಂದ ಹೊರಗುಳಿದ ಮಕ್ಕಳನ್ನು ವಾಪಸ್ ಕರೆತರುವುದಕ್ಕೆ ಇರುವ ಕ್ರಮಗಳ ಬಗ್ಗೆ ವಿವರಣೆ ನೀಡುವಂತೆ ಸೂಚನೆ ನೀಡಿ ವಿಚಾರಣೆ ಮುಂದೂಡಿತು.