Publish Date: Tue, 19 Apr 2022 (19:25 IST)
Updated Date: Tue, 19 Apr 2022 (19:34 IST)
ಏಪ್ರಿಲ್ 22ರಿಂದ ಮೇ 18ರವರೆಗೆ ನಡೆಯುವ ದ್ವಿತೀಯ ಪಿಯು ಪರೀಕ್ಷೆಗೆ ಪದವಿಪೂರ್ವ ಶಿಕ್ಷಣ ಇಲಾಖೆ ಸಂಪೂರ್ಣ ಸಿದ್ದತೆ ಮಾಡಿಕೊಂಡಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ತಿಳಿಸಿದರು.
ಮಂಗಳವಾರ (ಏ.19) ವಿಧಾನಸೌಧದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವರು, ಪಿಯು ಪರೀಕ್ಷೆ ಕುರಿತು ಮಾಹಿತಿ ನೀಡಿದರು.
ರಾಜ್ಯದ ಒಟ್ಟು 1,076 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಅದರಲ್ಲಿ 6,00,519 ರೆಗ್ಯುಲರ್ ವಿದ್ಯಾರ್ಥಿಗಳು, 61,808 ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 21,928 ಖಾಸಗಿ ಅಭ್ಯರ್ಥಿಗಳು ಇದ್ದಾರೆ. ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಣೆ ಮಾಡಲು ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪರೀಕ್ಷಾ ಕೇಂದ್ರಗಳ ಬಳಿ ಪೊಲೀಸ್ ಬಂದೋಬಸ್ತ್ ಇರಲಿದೆ. ಪಿಯು ಪರೀಕ್ಷೆ ಸಂಬಂಧಿಸಿದ ಎಲ್ಲ ಕಾರ್ಯಗಳು ಪೊಲೀಸ್ ಬಂದೋಬಸ್ತ್ನಲ್ಲಿ ನಡೆಯಲಿವೆ. 24/7 ಸಿಸಿಟಿವಿ ಕ್ಯಾಮೆರಾ ನಿಗಾ ಇರಲಿದೆ ಎಂದು ಸಚಿವ ನಾಗೇಶ್ ಅವರು ಮಾಹಿತಿ ನೀಡಿದರು.
ಪರೀಕ್ಷೆಗೂ ಸಮವಸ್ತ್ರ ನಿಯಮ ಅನ್ವಯವಾಗುತ್ತದೆ. ಪುನರಾವರ್ತಿತ ಮತ್ತು ಖಾಸಗಿ ಅಭ್ಯರ್ಥಿಗಳಿಗೆ ಸಮವಸ್ತ್ರದಿಂದ ವಿನಾಯಿತಿ ಇರುತ್ತದೆ. ಆದರೆ, ಸಾಮಾನ್ಯ ಧಿರಿಸಿನಲ್ಲಿ ಪರೀಕ್ಷೆಗೆ ಹಾಜರಾಗುವವರು ಸರ್ಕಾರ ಮತ್ತು ಹೈಕೋರ್ಟ್ ಆದೇಶಗಳನ್ನು ಪಾಲಿಸಬೇಕು ಎಂದು ಸಚಿವ ನಾಗೇಶ್ ಅವರು ತಿಳಿಸಿದರು.
ಪರೀಕ್ಷಾ ಅಕ್ರಮಗಳನ್ನು ತಡೆಯಲು ಮತ್ತು ನಿಗಾ ಇರಿಸಲು ಜಾಗೃತ ದಳಗಳು ಕಾರ್ಯ ನಿರ್ವಹಿಸಲಿವೆ. ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಬೇಕಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಈ ಹಿಂದೆ ನಕಲು ಪ್ರಯತ್ನ ನಡೆದಿರುವ ಪರೀಕ್ಷಾ ಕೇಂದ್ರಗಳ ಬಳಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಕೈಗೊಳ್ಳುವ ಕುರಿತು ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವರಿಷ್ಠಾಧಿಕಾರಿಗಳು ನಿರ್ಧಾರ ತೆಗೆದುಕೊಳ್ಳುತ್ತಾರೆ. ಈ ಕುರಿತು ಹಲವು ಸುತ್ತಿನ ಸಭೆಗಳು ನಡೆದಿವೆ ಎಂದು ಸಚಿವರು ತಿಳಿಸಿದರು.
ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳು ಪರೀಕ್ಷೆ ನಡೆಯುವ ದಿನಗಳಂದು ತಮ್ಮ ಹಾಲ್ ಟಿಕೆಟ್ ತೋರಿಸಿ ಉಚಿತವಾಗಿ ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸಲು ಸಾರಿಗೆ ಇಲಾಖೆ ಅವಕಾಶ ಕಲ್ಪಿಸಿದೆ ಎಂದು ಸಚಿವರು ತಿಳಿಸಿದರು.
geetha
Publish Date: Tue, 19 Apr 2022 (19:25 IST)
Updated Date: Tue, 19 Apr 2022 (19:34 IST)