Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು : ಪಕ್ಷದ ತತ್ವ ಸಿದ್ಧಾಂತವನ್ನು ಒಪ್ಪಿಕೊಂಡು ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಿಳಿಸಿದರು.
ಕಾಂಗ್ರೆಸ್ ಸೇರ್ಪಡೆಯಾದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ. ಬಹಳ ಜನಕ್ಕೆ ಆಶ್ವರ್ಯವಾಗಿದೆ. ಸಿಎಂ, ಪ್ರತಿಪಕ್ಷದ ನಾಯಕನಾಗಿ ಪಕ್ಷದ ಅಧ್ಯಕ್ಷನಾಗಿದ್ದ ವ್ಯಕ್ತಿ ಏಕೆ ಪಕ್ಷ ಬಿಡ್ತಿದ್ದಾರೆ ಅಂತಾ ಎಲ್ಲರೂ ಕೇಳುತ್ತಿದ್ದಾರೆ. ಆದರೆ ನನಗೆ ಬಹಳ ಬೇಜಾರಾಗಿದೆ ಎಂದು ಹೇಳಿದರು.
ಉತ್ತರ ಕರ್ನಾಟಕದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದೆ. ಜೊತೆಗೆ ಬಿಜೆಪಿಯೂ ಎಲ್ಲಾ ಸ್ಥಾನಮಾನ ಕೊಟ್ಟಿದೆ. ಪಕ್ಷ ಕೊಟ್ಟ ಎಲ್ಲಾ ಜವಾಬ್ದಾರಿಯನ್ನು ನಿರ್ವಹಿಸಿದ್ದೇನೆ. 6 ಬಾರಿ ನಿರಂತರವಾಗಿ ಗೆದ್ದಿದ್ದೇನೆ. 7ನೇ ಬಾರಿ ಸ್ಪರ್ಧೆ ಮಾಡಬೇಕು. ಒಬ್ಬ ಹಿರಿಯ ನಾಯಕನಿಗೆ ನ್ಯಾಚುರಲ್ ಆಗಿ ಟಿಕೆಟ್ ಸಿಗುತ್ತದೆ ಅನ್ಕೊಂಡಿದ್ದೆ. ಯಾವಾಗ ಟಿಕೆಟ್ ಸಿಗಲ್ಲ ಎಂದು ಹೇಳಿದ್ದರೋ ಆಘಾತವಾಯ್ತು ಎಂದು ಬೇಸರ ವ್ಯಕ್ತಪಡಿಸಿದರು.