Publish Date: Sun, 25 Jul 2021 (20:54 IST)
Updated Date: Sun, 25 Jul 2021 (21:01 IST)
ಬೆಂಗಳೂರು: ಕೇರಳ ಮತ್ತು ಕರ್ನಾಟಕದ ಕರಾವಳಿಯಲ್ಲಿ ಕಡಿಮೆ ಒತ್ತಡವಿರುವ ವಿಸ್ತರಿಸಿದ ಪ್ರದೇಶವಿದೆ. ಜಾರ್ಖಂಡ್ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರ ಪ್ರಭಾವದಿಂದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 29ರವರೆಗೆ ಭಾರಿ ಮಳೆಯಾಗುವ ಹೆಚ್ಚಿನ ಸಾಧ್ಯತೆಯಿದೆ.
ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 25ರಿಂದ 29ರವರೆಗೆ ಮಳೆಯಾಗುವ ಹೆಚ್ಚಿನ ಸಾಧ್ಯತೆಯಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜುಲೈ 26 ಮತ್ತು 27ರಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ. ಶಿವಮೊಗ್ಗ, ಚಿಕ್ಕಮಂಗಳೂರು, ಹಾಸನ, ಕೊಡಗು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಜುಲೈ 26ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನೈರುತ್ಯ ಮುಂಗಾರು ಭಾನುವಾರ ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಕರಾವಳಿ ಜಿಲ್ಲೆಗಳಲ್ಲಿ ಬಹುತೇಕ ಎಲ್ಲ ಕಡೆ, ದಕ್ಷಿಣ ಒಳನಾಡಿನಲ್ಲಿ ಹಲವೆಡೆ ಹಾಗೂ ಉತ್ತರ ಒಳನಾಡಿನಲ್ಲಿ ಕೆಲವು ಸ್ಥಳಗಳಲ್ಲಿ ಮಾತ್ರ ಮಳೆಯಾಗಿದೆ.
ಮುಖ್ಯವಾಗಿ, ಶಿವಮೊಗ್ಗದ ಆಗುಂಬೆ, ತೀರ್ಥಹಳ್ಳಿಯಲ್ಲಿ ತಲಾ 10 ಸೆಂ.ಮೀ, ಉಡುಪಿಯ ಕೊಲ್ಲೂರಿನಲ್ಲಿ 8 ಸೆಂ.ಮೀ, ಬೆಳಗಾವಿಯ ಲೊಂಡ, ಮಡಿಕೇರಿ, ಚಿಕ್ಕಮಗಳುರಿನ ಕೊಪ್ಪದಲ್ಲಿ 6 ಸೆಂ.ಮೀ, ದಕ್ಷಿಣ ಕನ್ನಡದ ಸುಬ್ರಮಣ್ಯ, ಉಡುಪಿಯ ಸಿದ್ದಾಪುರ, ಶಿರಾಲಿ, ಕದ್ರಾಾ, ಭಟ್ಕಳ, ಶಿವಮೊಗ್ಗದ ತಾಳಗುಪ್ಪ, ಶೃಂಗೇರಿ, ಜಯಪುರ, ಹಾಸನದ ಸಕಲೇಶಪುರದಲ್ಲಿ ತಲಾ 5 ಸೆಂ.ಮೀ, ಧರ್ಮಸ್ಥಳ, ಸುಳ್ಯ, ಬೆಳಗಾವಿಯ ಖಾನಪುರ, ಶಿವಮೊಗ್ಗದ ಲಿಂಗನಮಕ್ಕಿ, ಚಿಕ್ಕಮಗಳೂರಿನ ಬಾಳೆಹೊನ್ನೂರಿನಲ್ಲಿ ತಲಾ 4 ಸೆಂ.ಮೀ. ಮಳೆಯಾಗಿದೆ ಎಂದು ಮಾಹಿತಿ ನೀಡಿದೆ.