Publish Date: Thu, 20 Apr 2023 (17:26 IST)
Updated Date: Thu, 20 Apr 2023 (17:31 IST)
ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಅಂತಿಮ ಹಂತ ತಲುಪುತ್ತಿದ್ದಂತೆ, ಇತ್ತ ಪಕ್ಷವನ್ನು ಗೆಲ್ಲಿಸಿಕೊಳ್ಳಲು ಬೇಕಾದ ರಣತಂತ್ರಗಳನ್ನು ರೂಪಿಸಿಕೊಳ್ಳಲು ಎಐಸಿಸಿ ವೀಕ್ಷಕರ ಸಭೆ ನಡೆಯಿತು. ಬೆಂಗಳೂರಿನ ರ್ಯಾಡಿಸನ್ ಬ್ಲೂ ಹೋಟೆಲ್ನಲ್ಲಿ ನಡೆದ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಾಗವಹಿಸಿದ್ರು. ಸಭೆಯ ಬಳಿಕ ಟ್ವೀಟ್ ಮಾಡಿರುವ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ವೀಕ್ಷಕರ ಸಭೆ ನಡೆಸಿದ್ದೇವೆ. ನಾವು ಚುನಾವಣಾ ಸಮರಕ್ಕೆ ಸಂಪೂರ್ಣ ಸಿದ್ಧರಿದ್ದೇವೆ. ನಮ್ಮ ಕರ್ನಾಟಕದ ಭವಿಷ್ಯಕ್ಕಾಗಿ ಹೋರಾಡುತ್ತೇವೆ ಎಂದಿದ್ದಾರೆ. ಸಭೆಯ ಬಳಿಕ ಮಾತನಾಡಿದ ಡಿ.ಕೆ. ಶಿವಕುಮಾರ್, ಪಕ್ಷವನ್ನು ಗೆಲ್ಲಿಸಿಕೊಳ್ಳಲು ಏನೇನು ಮಾಡುತ್ತೇವೆಂದು ಹೇಳುವುದಿಲ್ಲ. ಆದರೆ, ಡಬಲ್ ಎಂಜಿನ್ ಸರ್ಕಾರ ಕರ್ನಾಟಕದಲ್ಲಿ ವಿಫಲವಾಗಿವೆ. ಇಲ್ಲಿನ ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸಲು ಬಿಜೆಪಿ ಸರ್ಕಾರಗಳಿಂದ ಸಾಧ್ಯವಾಗಿಲ್ಲ. ರಾಜ್ಯದ ಜನ ವಿದ್ಯಾವಂತರು, ಪ್ರಗತಿಶೀಲರು. ರಾಜ್ಯವನ್ನು ಭ್ರಷ್ಟಾಚಾರ ಮುಕ್ತಗೊಳಿಸಬೇಕಿದೆ. ಬೆಲೆ ಏರಿಕೆಯಿಂದ ತತ್ತರಿಸಿರುವ ಜನರನ್ನು ಕಾಪಾಡಬೇಕಿದೆ. ಹೀಗಾಗಿ, ಕಾಂಗ್ರೆಸ್ ಸಿದ್ಧಾಂತ ಒಪ್ಪಿ ಬರುವ ಎಲ್ಲರನ್ನೂ ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ ಎಂದರು.