Publish Date: Tue, 01 Mar 2022 (18:01 IST)
Updated Date: Tue, 01 Mar 2022 (17:32 IST)
ಬಿಬಿಎಂಪಿ ಚುನಾವಣಾ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಈ ತಿಂಗಳು ಇತ್ಯರ್ಥಪಡಿಸುವ ಸಾಧ್ಯತೆ ಇರುವುದರಿಂದ ಮೂರ್ನಾಲ್ಕು ತಿಂಗಳಲ್ಲಿ ಚುನಾವಣೆ ನಡೆಯಬಹುದು ಎಂದೇ ಎಲ್ಲರೂ ಭಾವಿಸಿದ್ದಾರೆ.
ಚುನಾಯಿತ ಪ್ರತಿನಿಧಿಗಳಿಲ್ಲದ ಬಿಬಿಎಂಪಿಗೆ ಸರ್ಕಾರ ಬೊಂಬಾಟ್ ಕೊಡುಗೆ ಘೋಷಿಸಿದೆ. ಇದರ ಜತೆಗೆ ಮುಂಬರುವ ಬಜೆಟ್ನಲ್ಲೂ ಪಾಲಿಕೆಗೆ ಭಾರಿ ಅನುದಾನ ನೀಡುವ ಸಾಧ್ಯತೆ ಇರುವುದರಿಂದ ತಮ್ಮ ಕ್ಷೇತ್ರಗಳಿಗೆ ಬಿಡುಗಡೆಯಾಗುವ ಅನುದಾನದಲ್ಲಿ ಪಾಲಿಕೆ ಸದಸ್ಯರಿಗೆ ಪಾಲು ನೀಡಲು ಇಚ್ಚೆ ಇಲ್ಲದ ಪಕ್ಷಾತೀತವಾಗಿ ಬಹುತೇಕ ಎಲ್ಲ ಶಾಸಕರು ಬಿಬಿಎಂಪಿಗೆ ಸಧ್ಯಕ್ಕೆ ಚುನಾವಣೆ ನಡೆಸುವುದು ಬೇಡ ಎಂದು ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ.
ಚುನಾವಣೆ ಮುಂದೂಡಲು ಶಾಸಕರು ಮಾಡಿರುವ ಹೊಸ ಪ್ಲಾನ್ ಏನು ಗೊತ್ತಾ.ಇಲ್ಲಿದೆ ನೋಡಿ ಅವರ ಖತರ್ನಾಕ್ ಐಡಿಯಾ. ಬಿಬಿಎಂಪಿ ವ್ಯಾಪ್ತಿಯಲ್ಲಿ ಇದ್ದ 198 ವಾರ್ಡ್ಗಳನ್ನು ಆಡಳಿತಾತ್ಮಕ ದೃಷ್ಟಿಯಿಂದ ಹೊರ ವಲಯದ ಒಂದು ಕಿ.ಮೀ ವ್ಯಾಪ್ತಿಯ ಪ್ರದೇಶಗಳನ್ನು ಸೇರ್ಪಡೆ ಮಾಡಿಕೊಂಡು 243 ವಾರ್ಡ್ ರಚಿಸಿ ಚುನಾವಣೆ ನಡೆಸುವುದಾಗಿ ಘೋಷಿಸಿದ್ದ ಸರ್ಕಾರ ಇದೇ ನೆಪದಿಂದ ಕಳೆದ 2020ರ ಸೆಪ್ಟೆಂಬರ್ನಲ್ಲಿ ನಡೆಯಬೇಕಿದ್ದ ಚುನಾವಣೆಯನ್ನು ಮುಂದೂಡಿತ್ತು.
ಯಲಹಂಕ, ಬೆಂಗಳೂರು ದಕ್ಷಿಣ, ಯಶವಂತಪುರ, ದಾಸರಹಳ್ಳಿ ಹಾಗೂ ಮಹದೇವಪುರ ವಿಧಾನಸಭಾ ಕ್ಷೇತ್ರಗಳ ಕೆಲ ಪ್ರದೇಶಗಳನ್ನು ಬಿಬಿಎಂಪಿ ವ್ಯಾಪ್ತಿಗೆ ಸೇರ್ಪಡೆ ಮಾಡಿಕೊಳ್ಳಲು ನಿರ್ಧರಿಸಲಾಗಿತ್ತು. ಹೀಗಾಗಿ ಕೆಲ ಪ್ರದೇಶಗಳಿಗೆ ನಡೆಯಬೇಕಿದ್ದ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ನಡೆಸಿರಲಿಲ್ಲ.