Publish Date: Sat, 14 Aug 2021 (09:58 IST)
Updated Date: Sat, 14 Aug 2021 (10:00 IST)
ಬೆಂಗಳೂರು (ಆ.14): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ರಮೇಶ್ ಜಾರಕಿಹೊಳಿ ಹಾಗೂ ಶ್ರೀಮಂತ ಪಾಟೀಲ್ ಅವರಿಗೆ ಅತಿ ಶೀಘ್ರದಲ್ಲೇ ಸ್ಥಾನ ಸಿಗಲಿದೆ ಎಂದು ಅರಬಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.
ಆರ್.ಟಿ.ನಗರದಲ್ಲಿ ಮುಖ್ಯಮಂತ್ರಿಗಳ ಖಾಸಗಿ ನಿವಾಸದಲ್ಲಿ ಬೊಮ್ಮಾಯಿ ಅವರನ್ನು ಶುಕ್ರವಾರ ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಾರಕಿಹೊಳಿ ಅವರು, ನಾನು ಸಚಿವ ಸ್ಥಾನಕ್ಕೆ ಆಸೆ ಪಟ್ಟಿಲ್ಲ. ನಾನು ಕೆಎಂಎಫ್ನಲ್ಲೇ ಒಳ್ಳೆಯ ಕೆಲಸ ಮಾಡುತ್ತಿದ್ದೇನೆ. ಆ ಹುದ್ದೆಯೇ ಸಾಕು ಎಂದರು.
ನಾವು (ಜಾರಕಿಹೊಳಿ ಸೋದರರು) ಪಕ್ಷ ಹಾಗೂ ಸರ್ಕಾರದ ವಿರುದ್ಧ ಹೋಗದಿಲ್ಲ. ಯಾವುದೇ ಗೌಪ್ಯ ಸಭೆ ನಡೆಸಿಲ್ಲ. ವಿಶ್ವಾಸದಿಂದ ಕೆಲ ಶಾಸಕರು ಆಗಾಗ್ಗೆ ಒಂದೆಡೆ ಸೇರುತ್ತೇವೆ ಅಷ್ಟೇ. ಆದರೆ ಆ ಸಭೆಗಳಿಗೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದು ಹೇಳಿದರು.
ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ ಹಾಗೂ ಶ್ರೀಮಂತ ಪಾಟೀಲ್ ಅವರಿಗೆ ಖಂಡಿತ ಒಳ್ಳೆಯದಾಗುತ್ತದೆ. ಬೊಮ್ಮಾಯಿ ಸರ್ಕಾರದಲ್ಲಿ ಆ ಇಬ್ಬರಿಗೂ ಸಚಿವ ಸ್ಥಾನ ಸಿಗುವ ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.