Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು ಆಗಸ್ಟ್ 06: ಕರೋನಾ ಲಾಕ್ಡೌನ್ ನಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿರುವವರಲ್ಲಿ ಕರಕುಶಲ ಕರ್ಮಿಗಳೂ ಒಬ್ಬರು. ಸರಿಯಾದ ಮಾರುಕಟ್ಟೆ ಇಲ್ಲದೆ ತೊಂದರೆಗೆ ಸಿಲುಕಿರುವ ಕುಶಲಕರ್ಮಿಗಳಿಗೆ ಉತ್ತಮ ವೇದಿಕೆಯನ್ನು ಒದಗಿಸುವ ಉದ್ದೇಶದಿಂದ ಕರ್ನಾಟಕ ಚಿತ್ರಕಲಾ ಪರಿಷತ್ ಆವರಣದಲ್ಲಿ ಇಂದಿನಿಂದ 10 ದಿನಗಳ ಕಾಲ ಆಯೋಜಿಸಲಾಗಿರುವ ಬೆಂಗಳೂರು ಉತ್ಸವಕ್ಕೆ ಚಾಲನೆ ನೀಡಲಾಯಿತು.
ಬೆಂಗಳೂರು ಉತ್ಸವಕ್ಕೆ ಚಾಲನೆ ನೀಡಿದ ನಟಿ ಶುಭಾ ಶೆಟ್ಟಿ ಮಾತನಾಡಿ, ಕರೋನಾ ಕಾಲದಲ್ಲಿ ಎಲ್ಲರಿಗೂ ಸಂಕಷ್ಟ ಅನುಭವಿಸಿದ್ದಾರೆ. ಅದರಲ್ಲೂ ಕರಕುಶಲಕರ್ಮಿಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಇಲ್ಲದೆ ತೊಂದರೆಗೀಡಾಗಿದ್ದರು. ಅವರಿಗೆ ಮಾರುಕಟ್ಟೆಯ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಆಯೋಜಿಸಲಾಗಿರುವ ಬೆಂಗಳೂರು ಉತ್ಸವದಲ್ಲಿ ಪಾಲ್ಗೊಂಡು ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕರಕುಶಲ ಕರ್ಮಿಗಳಿಗೆ ಪ್ರೋತ್ಸಾಹ ನೀಡಿ ಎಂದು ಮನವಿ ಮಾಡಿದರು.
ಈ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಆಗಸ್ಟ್ 15 ರ ವರೆಗೆ ಬೆಳಿಗ್ಗೆ 11 ರಿಂದ ಸಂಜೆ 7 ಗಂಟೆಯವರೆಗೆ ನಡೆಯಲಿದೆ. ಕರೋನಾ ಸಾಂಕ್ರಾಮಿಕ ಹರಡದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷರಾದ ಡಾ. ಬಿ.ಎಲ್ ಶಂಕರ್, ಕರ್ನಾಟಕ ಚಿತ್ರಕಲಾ ಪರಿಷತ್ತಿನ ಪ್ರಧಾನ ಕಾರ್ಯದರ್ಶಿಗಳಾದ ಪ್ರೊ. ಕೆ.ಎಸ್ ಅಪ್ಪಾಜಯ್ಯ ಪಾಲ್ಗೊಂಡಿದ್ದರು.