Publish Date: Sun, 30 Jul 2023 (06:04 IST)
Updated Date: Sun, 30 Jul 2023 (00:58 IST)
ಬೆಂಗಳೂರು : ಕರ್ನಾಟಕ ಸರ್ಕಾರದ ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆಯು ಜೈವಿಕ ತಂತ್ರಜ್ಞಾನ ನೀತಿಯನ್ನು ಅಳವಡಿಸಿಕೊಂಡಿದ್ದು, ಈಗ ಮುಂದುವರೆದ ತಂತ್ರಜ್ಞಾನವಾಗಿ ಅಭಿವೃದ್ಧಿಗೊಂಡಿರುವ ಕೃತಕ ಬುದ್ಧಿಮತ್ತೆ (ಆರ್ಟಿಫಿಷಿಯಲ್ ಇಂಟಲಿಜೆನ್ಸ್) ಮೂಲಕ ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ಮತ್ತಷ್ಟು ಅಭಿವೃದ್ಧಿ ಸಾಧಿಸುವಲ್ಲಿ ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆಯ ಸಚಿವರಾದ ಪ್ರಿಯಾಂಕ್ ಖರ್ಗೆ ಹೇಳಿದರು.
ಜೈವಿಕ ಬದಾಲಾವಣೆಗಳನ್ನು ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸುವ ಸಾಧ್ಯತೆಗಳ ಬಗ್ಗೆ ಸೆಂಟರ್ ಆಫ್ ಎಕ್ಸಲೆನ್ಸ್ ನೆರವನ್ನು ಪಡೆಯಲಾಗುವುದು ಎಂದು ಹೇಳಿದ ಸಚಿವರು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕಾದ ಅವಶ್ಯಕತೆಯಿದೆ ಎಂದರು.
ನಗರದ ರಾಡಿಸನ್ ಬ್ಲೂ ಏಟ್ರಿಯಾ ಹೋಟೆಲಿನಲ್ಲಿ ಏಟ್ರಿಯಾ ವಿಶ್ವವಿದ್ಯಾಲಯದ ಉತ್ಕೃಷ್ಟತೆಯ ಕೇಂದ್ರ ಮತ್ತು ಸ್ವಿಸ್ನೆಕ್ಸ್ ಸಂಸ್ಥೆಯ ಸಹಯೋಗದಲ್ಲಿ ನಡೆದ ಜೀವವೈವಿಧ್ಯ ರಕ್ಷಣೆಯಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತರುವ ನಿರೀಕ್ಷೆ ಇರುವ ಡಿಜಿಟಲ್ ತಂತ್ರಜ್ಞಾನದ ಮೂಲಕ ಜೀವ ವೈವಿಧ್ಯ ಸಂರಕ್ಷಣೆಗಾಗಿ ರೂಪಿಸಲಾಗಿರುವ ಜಾಗತಿಕ ಮುಕ್ತ ವೇದಿಕೆಯ ಮೊದಲ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಮಾತನಾಡುತ್ತಿದ್ದರು.
ವಿಶ್ವದಲ್ಲಿ ಇಂದಿನ ಪರಿಸರ ಅವನತಿಯನ್ನು ಎದುರಿಸಲು ಶಿಕ್ಷಣ, ಉದ್ಯಮ ಮತ್ತು ಸಂರಕ್ಷಣೆಯ ಮಧ್ಯಸ್ಥಗಾರರನ್ನು ಏಕೀಕೃತವಾಗಿ ಒಳಪಡಿಸುವ ನಿರ್ಣಾಯಕ ಅಗತ್ಯವಿದೆ ಎಂದು ಪ್ರಿಯಾಂಕ್ ಖರ್ಗೆ ಒತ್ತಿ ಹೇಳಿದರು. ಸುಸ್ಥಿರ ಬೆಳವಣಿಗೆ ಮತ್ತು ವನ್ಯಜೀವಿ ಸಂರಕ್ಷಣೆಗಾಗಿ ತಂತ್ರಜ್ಞಾನ-ಚಾಲಿತ ಪರಿಹಾರಗಳನ್ನು ರೂಪಿಸುವಲ್ಲಿ ದೇಶದ ಐಟಿ ರಾಜಧಾನಿಯಾದ ಬೆಂಗಳೂರು ಮತ್ತು ಕರ್ನಾಟಕ ಮುಂದಾಳತ್ವ ವಹಿಸಬೇಕಾದ ಅವಶ್ಯಕತೆಯಿದೆ ಎಂದು ಹೇಳಿದರು.