Publish Date: Mon, 06 Sep 2021 (14:37 IST)
Updated Date: Mon, 06 Sep 2021 (14:40 IST)
ರಾಜ್ಯದ ಮೂರು ಮಹಾನಗರ ಪಾಲಿಕೆಗಳ ಚುನಾವಣೆಯ ಫಲಿತಾಂಶವು ತೃಪ್ತಿದಾಯಕವಾಗಿದ್ದು, ಮೊದಲ ಬಾರಿಗೆ ಬೆಳಗಾವಿಯಲ್ಲಿ ಸ್ಪಷ್ಟ ಬಹುಮತದಿಂದ ಬಿ.ಜೆ.ಪಿ. ಅಧಿಕಾರಕ್ಕೆ ಬಂದಿದ್ದು, ಇದೊಂದು ಐತಿಹಾಸಿಕ ಗೆಲುವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್
ಯಡಿಯೂರಪ್ಪ ಸಂತಸ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ಮತ್ತು ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಸಂಸದರು, ಶಾಸಕರ ಹಾಗೂ ವಿಧಾನಪರಿಷತ್ ಸದಸ್ಯರ ಬೆಂಬಲದೊಂದಿಗೆ ಬಿಜೆಪಿ ಪುನಃ. ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರಲಿದೆ ಎಂದು ಅವರು ಸೋಮವಾರ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಜೀಯವರ ಜನಪರ ಯೋಜನೆಗಳು, ಸಾಧನೆಗಳು ಚುನಾವಣೆ ಮೇಲೆ ಪ್ರಭಾವ ಬೀರಿದೆ ಎನ್ನುವುದಕ್ಕೆ ಈ ಫಲಿತಾಂಶ ನಿದರ್ಶನ. ರಾಜ್ಯದಲ್ಲಿ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾದ ನಂತರ ಉತ್ತಮ ಫಲಿತಾಂಶ ಬಂದಿದೆ. ಸಂಸದರು, ಶಾಸಕರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಪರಿಶ್ರಮದಿಂದ ಫಲಿತಾಂಶವು ತೃಪ್ತಿದಾಯವಾಗಿದೆ ಎಂದು ಅವರು ಹೇಳಿದ್ದಾರೆ.
ಒಟ್ಟಾರೆಯಾಗಿ ಮೂರು ಮಹಾನಗರ ಪಾಲಿಕೆಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ಅಭಿವೃದ್ಧಿಪರ ಆಡಳಿತ ನೀಡಲಿದೆ. ಈ ಐತಿಹಾಸಿಕ ಗೆಲುವಿನ ಹಿನ್ನೆಲೆಯಲ್ಲಿ ಪಕ್ಷದ ಎಲ್ಲಾ ಕಾರ್ಯಕರ್ತರಿಗೂ, ಮತದಾರರಿಗೆ ಹಾಗೂ ಮುಖಂಡರಿಗೆ ತುಂಬು ಹೃದಯ ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.