Publish Date: Thu, 05 Mar 2020 (20:43 IST)
Updated Date: Thu, 05 Mar 2020 (20:44 IST)
ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಪ್ರಸಕ್ತ ಸಾಲಿನ ಆಯವ್ಯಯವನ್ನು ಪ್ರಪ್ರಥಮ ಬಾರಿಗೆ ಇಲಾಖಾವಾರು ಬದಲಾಗಿ ಆರು ವಲಯಗಳನ್ನಾಗಿ ಹಂಚಿಕೆ ಮಾಡಲಾಗಿದೆ.
ಬಜೆಟ್ ಅನುದಾನವನ್ನು ವಿನೂತನವಾಗಿ ವಿಂಗಡಿಸಿ ಹಂಚಿಕೆ ಮಾಡಿರುವುದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರು ಮಂಡಿಸಿರುವ ರಾಜ್ಯದ 2020-2021ರ ಆಯವ್ಯಯದ ಮುಖ್ಯಾಂಶವಾಗಿದೆ. ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯತ್ತ ಹೆಜ್ಜೆಯನ್ನಿರಿಸಿರುವುದನ್ನು ಇದು ಸೂಚಿಸುತ್ತದೆ ಎಂದು ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಸಿ.ಪಾಟೀಲ ತಿಳಿಸಿದ್ದಾರೆ.
ಆರು ವಲಯಗಳಾದ ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ 32,590 ಕೋಟಿ ರೂ., ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ 72,093 ಕೋಟಿ ರೂ., ಆರ್ಥಿಕ ಅಭಿವೃದ್ಧಿಗೆ ಪ್ರಚೋದನೆ 55,732 ಕೋಟಿ ರೂ., ಬೆಂಗಳೂರು ಸಮಗ್ರ ಅಭಿವೃದ್ಧಿ 8,772 ಕೋಟಿ ರೂ., ಸಂಸ್ಕೃತಿ, ಪರಂಪರೆ ಹಾಗೂ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ 4,552 ಕೋಟಿ ರೂ., ಹಾಗೂ ಆಡಳಿತ ಸುಧಾರಣೆ ಮತ್ತು ಸಾರ್ವಜನಿಕ ಸೇವೆಗಳು 10,194 ಕೋಟಿ ರೂ.ಗಳನ್ನು ಮುಖ್ಯಮಂತ್ರಿ ರಾಜ್ಯ ಬಜೆಟ್ ನಲ್ಲಿ ಒದಗಿಸಿದ್ದಾರೆ ಎಂದಿದ್ದಾರೆ.