Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಕಲಬುರಗಿಯ ಚಿತ್ತಾಪುರ ಕ್ಷೇತ್ರದಲ್ಲಿ ಶಾಸಕ ಪ್ರಿಯಾಂಕ್ ಖರ್ಗೆ ಕಾಣೆಯಾಗಿದ್ದಾರೆ ಎಂದು BJP ಪೋಸ್ಟರ್ ಅಂಟಿಸಿತ್ತು. ಇದು BJP ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಕಿತ್ತಾಟಕ್ಕೆ ಕಾರಣವಾಗಿದೆ. ಪೋಸ್ಟರ್ ವಿಚಾರವಾಗಿ ಕಾಂಗ್ರೆಸ್, BJP ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಚಿತ್ತಾಪುರ ಕ್ಷೇತ್ರದ ವಾಡಿ ಪಟ್ಟಣದ ಪೊಲೀಸ್ ಠಾಣೆ ಎದುರು ಲಾಠಿ ಚಾರ್ಜ್ ನಡೆದಿದೆ. ಬಿಜೆಪಿ ಮುಖಂಡ ಅರವಿಂದ್ ಚೌವ್ಹಾಣ್ ಶಾಸಕ ಪ್ರಿಯಾಂಕ್ ಖರ್ಗೆ ಕಾಣೆಯಾಗಿದ್ದಾರೆ ಎಂಬ ಪೋಸ್ಟರ್ಗಳನ್ನು ತಾಲೂಕಿನಾದ್ಯಂತ ಅಂಟಿಸಿದ್ರು. ಇದಕ್ಕೆ ಸಿಟ್ಟಿಗೆದ್ದ ಕಾಂಗ್ರೆಸ್ ಕಾರ್ಯಕರ್ತರು BJP ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ದಾರೆ. ಈ ಕುರಿತು ಪೊಲೀಸ್ ಠಾಣೆಗೆ ದೂರು ನೀಡಲು BJP ಕಾರ್ಯಕರ್ತರು ಬಂದಿದ್ದು, ಇದೇ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಕೂಡ ಠಾಣೆಗೆ ಎಂಟ್ರಿ ಕೊಟ್ಟಿದ್ದಾರೆ. ಬಳಿಕ ಎರಡು ಗುಂಪಿನ ನಡುವೆ ಮಾತಿನ ಚಕಮಕಿ ಉಂಟಾಗಿದೆ. ಠಾಣೆ ಮುಂದೆ ಜಮಾಯಿಸಿದ್ದ BJP, ಕಾಂಗ್ರೆಸ್ ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ನಡೆಸಿದ್ದಾರೆ.