Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಅನಿವಾರ್ಯ ಕಾರಣಗಳಿಂದ ಮುಂದೂಡಲ್ಪಟ್ಟಿದ್ದ ಬಿಜೆಪಿ ಕಾರ್ಯಕಾರಿಣಿ ಸಭೆ 24ಕ್ಕೆ ಅರಮನೆ ಮೈದಾನದಲ್ಲಿ ನಡೆಯಲಿದೆ. ಈ ಹಿಂದೆ ಸೆ.11ರಂದು ಕಾರ್ಯಕಾರಿಣಿ ಸಭೆ ನಡೆಯಬೇಕಾಗಿತ್ತು. ದೊಡ್ಡಬಳ್ಳಾಪುರದಲ್ಲಿ ನಡೆದ ಜನ ಸ್ಪಂದನ ಕಾರ್ಯಕ್ರಮ ಹಾಗೂ ಅಧಿವೇಶನದ ಹಿನ್ನಲೆಯಲ್ಲಿ ಮುಂದೂಡಲಾಗಿತ್ತು.
ಇದೀಗ 24ರಂದು ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಜೆ.ಪಿ.ನಡ್ಡಾ, ಅಮಿತ್ ಷಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪಕ್ಷದ ರಾಜ್ಯಾಧ್ಯಕ್ಷ ನಳೀನ್ಕುಮಾರ್ ಕಟೀಲ್, ಕೇಂದ್ರ ಮತ್ತು ರಾಜ್ಯ ಸಚಿವರು, ಶಾಸಕರು, ಲೋಕಸಭೆ ಸದಸ್ಯರು, ವಿಧಾನಪರಿಷತ್ ಸದಸ್ಯರು ಸೇರಿದಂತೆ ಪದಾಧಿಕಾರಿಗಳು ಭಾಗಿಯಾಗಲಿದ್ದಾರೆ.
ಬಹುನಿರೀಕ್ಷಿತ ಕಾರ್ಯಕಾರಿಣಿ ಸಭೆಯಲ್ಲಿ ಬಿಬಿಎಂಪಿ, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣೆ ಹಾಗು 2023ರ ವಿಧಾನಸಭೆ ಚುನಾವವಣೆಗೆ ಕೇಸರಿ ಕಲಿಗಳು ರಣತಂತ್ರ ರೂಪಿಸಲಿದ್ದಾರೆ.
ಮಂಗಳೂರು ಮತ್ತು ದೊಡ್ಡಬಳ್ಳಾಪುರದಲ್ಲಿ ನಡೆದ ಯಶಸ್ವಿ ಸಮಾವೇಶದಿಂದ ಬೀಗುತ್ತಿರುವ ಬಿಜೆಪಿ ರಾಜ್ಯಾದಂತ ಜಾತಿವಾರು ಸಮಾವೇಶ ಗಳನ್ನು ನಡೆಸಿ ಚುನಾವಣೆಗೆ ಸಜ್ಜು ಮಾಡಲಿದೆ. ಇದೇ 23ರಂದು ಬಳ್ಳಾರಿಯಲ್ಲಿ ರಾಜ್ಯಮಟ್ಟದ ಬೃಹತ್ ಎಸ್ಟಿ ಸಮಾವೇಶ ನಡೆಯಲಿದೆ. ಸುಮಾರು 3 ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರನ್ನು ಸೇರಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಯನ್ನು ಜನರಿಗೆ ಮನವರಿಕೆ ಮಾಡಿಕೊಡಲಿದ್ದಾರೆ.