Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಕಲಬುರಗಿ : ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿರುವ ಕಾಂಗ್ರೆಸ್ ಪಕ್ಷ, ಡ್ರೈವರ್ ಇಲ್ಲದ ಬಸ್ ತರಹ ಆಗಿದೆ ಎಂದು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಲೇವಡಿ ಮಾಡಿದರು.
ನಗರದ ಐವನ್ ಇ ಶಾಹಿ ಅತಿಥಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಗುರುನೂ ಇಲ್ಲ, ಗುರಿಯೂ ಇಲ್ಲ. ಪ್ರಾದೇಶಿಕ ಪಕ್ಷಗಳನ್ನು ಕೊಲ್ಲಲು ಸಾಕಷ್ಟು ಪ್ರಯತ್ನ ಮಾಡಿದ ಕಾಂಗ್ರೆಸ್ ಇಂದು ಹೀನಾಯ ಸೋಲು ಅನುಭವಿಸಿದೆ ಎಂದು ಟೀಕಿಸಿದರು.
ಜೆಡಿಎಸ್ ಪಂಚರತ್ನ ರಥಯಾತ್ರೆಗೆ ಇಡೀ ರಾಜ್ಯಾದ್ಯಂತ ನಡುರಾತ್ರಿ 3 ಗಂಟೆಯಾದರೂ ಹಳ್ಳಿಗಳಲ್ಲಿ ಸ್ವಾಗತ ಕೋರುತ್ತಿದ್ದಾರೆ. ಮೊನ್ನೆ ಶಿರಾದಲ್ಲಿ ಮುಸ್ಲಿಂ ಮಹಿಳೆಯರು ಅದ್ಧೂರಿಯಾಗಿ ಪಂಚರತ್ನ ರಥಯಾತ್ರೆಯನ್ನು ಮಧ್ಯರಾತ್ರಿ 2 ಗಂಟೆಗೆ ಸ್ವಾಗತ ಮಾಡಿದ್ದಾರೆ ಎಂದರು.