Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಕಾಂಗ್ರೆಸ್ ನಾಯಕರಾದ ಶ್ರೀಮತಿ ಸೋನಿಯಾ ಗಾಂಧಿ ಅವರಿಗೆ ಇ.ಡಿ ವಿಚಾರಣೆ ನೆಪದಲ್ಲಿ ಕಿರುಕುಳ ನೀಡುತ್ತಿರುವುದನ್ನು ಖಂಡಿಸಿ, ಕಾಂಗ್ರೆಸ್ ಪಕ್ಷ ಇಂದು ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಮಾತುಗಳು:
ಕಳೆದ ತಿಂಗಳು ರಾಹುಲ್ ಗಾಂಧಿ ಅವರನ್ನು ಇ.ಡಿ ವಿಚಾರಣೆಗೆ ಕರೆದಾಗ ಇಡಿ ಕಚೇರಿ ವರೆಗೆ ಪ್ರತಿಭಟನೆ ಇಟ್ಟುಕೊಂಡು, ಅದಕ್ಕೆ ಮುತ್ತಿಗೆ ಹಾಕುವ ಕೆಲಸವನ್ನು ಮಾಡಿದ್ದೆವು. ಈಗ ಮತ್ತೆ ಶ್ರೀಮತಿ ಸೋನಿಯಾ ಗಾಂಧಿ ಅವರನ್ನು ಇಡಿ ಕರೆಸಿಕೊಂಡು ವಿಚಾರಣೆ ಮಾಡುತ್ತಿದೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ವಿಚಾರಣೆಗೆ ಕರೆದರೆ ಕಾಂಗ್ರೆಸ್ ಯಾಕೆ ಹೆದರಿಕೊಳ್ಳಬೇಕು ಎಂದು ಭಾರತೀಯ ಜನತಾ ಪಕ್ಷದವರು ದೇಶದ ಜನರನ್ನು ತಪ್ಪು ದಾರಿಗೆ ಎಳೆಯುವ ಕೆಲಸ ಮಾಡುತ್ತಿದ್ದಾರೆ.
ನಾವ್ಯಾರು ದೇಶದ ಕಾನೂನಿಗಿಂತ ದೊಡ್ಡವರಲ್ಲ. ಆದರೆ ಮೋದಿ ಅವರು ಅಧಿಕಾರಕ್ಕೆ ಬಂದ ಮೇಲೆ ಸ್ವಾಯತ್ತ ತನಿಖಾ ಸಂಸ್ಥೆಗಳಾದ ಸಿಬಿಐ, ಇಡಿ, ಐಟಿ ಗಳನ್ನು ದುರುಪಯೋಗ ಮಾಡಿಕೊಂಡು ಕಾಂಗ್ರೆಸ್ ಪಕ್ಷದ ನಾಯಕರನ್ನು ಹೆದರಿಸುವ ಕೆಲಸ ಮಾಡುತ್ತಿದ್ದಾರೆ. ದೇಶದಲ್ಲಿ ಇರುವುದು ಎರಡೇ ರಾಷ್ಟ್ರೀಯ ಪಕ್ಷಗಳು. ಕಮ್ಯುನಿಷ್ಟ್ ಪಕ್ಷ ರಾಷ್ಟ್ರೀಯ ಪಕ್ಷವಾದರೂ ತಮ್ಮನ್ನು ಚುನಾವಣೆಯಲ್ಲಿ ಸೋಲಿಸುವ ಶಕ್ತಿ ಇರುವುದು ಕಾಂಗ್ರೆಸ್ ಗೆ ಮಾತ್ರ ಎಂಬುದು ಬಿಜೆಪಿ ಅವರಿಗೆ ಗೊತ್ತಾಗಿದೆ.