Publish Date: Wed, 01 Sep 2021 (14:12 IST)
Updated Date: Wed, 01 Sep 2021 (11:49 IST)
ಚಾಮರಾಜನಗರ: ಕರೊನಾ ಲಸಿಕೆ ಹಾಕಿಸಿಕೊಂಡಿಲ್ಲದವರಿಗೆ ರೇಷನ್ ಮತ್ತು ಪೆನ್ಷನ್ ಸಿಗಲ್ಲ ಎಂದು ಆದೇಶ ಹೊರಡಿಸಿದ್ದ ಚಾಮರಾಜನಗರ ಡಿಸಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.
ಚಾಮರಾಜನಗರದಲ್ಲಿ ಬಿಜೆಪಿ ಸರ್ಕಾರ ಹೇಳುತ್ತೆ ಕೋವಿಡ್ ಲಸಿಕೆ ಪಡೆಯದಿದ್ರೆ ಪಡಿತರ, ಪಿಂಚಣಿ ಎರಡೂ ಇಲ್ಲ ಅಂತ. ಆದ್ರೆ, ಲಸಿಕೆಗಳು ಜನಸಂಖ್ಯೆಗೆ ಸಾಕಾಗುವಷ್ಟು ಇವೆಯಾ? ಲಸಿಕೆ ಪಡೆಯುವಂತೆ ಜನರ ಮನವೊಲಿಸಿದ್ದಾರಾ? ಮೂಲ ಸೌಕರ್ಯಗಳಾದ ಆಹಾರ ಮತ್ತು ಪಿಂಚಣಿ ನೀಡುವುದಿಲ್ಲ ಅಂತ ಹೆದರಿಸುವುದು ಅಕ್ರಮ, ಅನೈತಿಕ ಹಾಗೂ ಅಸಾಂವಿಧಾನಿಕ. ಬಿಜೆಪಿ ಸರ್ಕಾರ ಹಾಗೂ ಚಾಮರಾಜನಗರ ಜಿಲ್ಲಾಡಳಿತಕ್ಕೆ ನಾಚಿಕೆಯಾಗ್ಬೇಕು. ಆಕ್ಸಿಜನ್ ಪೂರೈಸಲು ಅಸಮರ್ಥರಾಗಿ 36 ಅಮಾಯಕರ ಜೀವ ತೆಗೆದಿದ್ದಾರೆ. ಲಸಿಕೆ ಪಡೆಯದವರಿಗೆ ಶಿಕ್ಷಿಸಲು ಮುಂದಾಗಿರುವವರು ಮೊದಲು ಆಕ್ಸಿಜನ್, ಲಸಿಕೆ, ಪರೀಕ್ಷೆ ಹಾಗೂ ಮೃತರಿಗೆ ಸೂಕ್ತ ಪರಿಹಾರ ನೀಡದಿದ್ದಕ್ಕೆ ಕ್ಷಮೆ ಕೇಳಲಿ ಎಂದು ಸಾಮಾಜಿಕ ಜಾಲತಾಣದಲ್ಲಿ ಡಿಕೆಶಿ ಅಸಮಾಧಾನ ಹೊರಹಾಕಿದ್ದಾರೆ.
'ನೋ ವ್ಯಾಕ್ಸಿನೇಷನ್- ನೋ ರೇಷನ್, ನೋ ವ್ಯಾಕ್ಸಿನೇಷನ್-ನೋ ಪೆನ್ಷನ್'. ವ್ಯಾಕ್ಸಿನೇಷನ್ ಪ್ರಮಾಣ ಪತ್ರ ತಂದರೆ ಮಾತ್ರ ಫಲಾನುಭವಿಗಳಿಗೆ ಪಡಿತರ ವಿತರಿಸುವಂತೆ ನ್ಯಾಯಬೆಲೆ ಅಂಗಡಿಗಳಿಗೆ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಸೂಚಿಸಿಜ. ದ್ದಾರೆ. ಅಷ್ಟೇ ಅಲ್ಲ ಮಾಸಾಶನ ಪಡೆಯಬೇಕಿದ್ದರೂ ವ್ಯಾಕ್ಸಿನೇಷನ್ ಪ್ರಮಾಣಪತ್ರ ಬೇಕೇಬೇಕು. ಈ ಪತ್ರ ತಂದರಷ್ಟೇ ಹಣ ಪಾವತಿಸುವಂತೆ ಎಲ್ಲ ಬ್ಯಾಂಕ್ಗಳಿಗೂ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಇದನ್ನು ಡಿಕೆಶಿ ತೀವ್ರವಾಗಿ ಖಂಡಿಸಿದ್ದಾರೆ.