Publish Date: Fri, 30 Aug 2019 (10:16 IST)
Updated Date: Fri, 30 Aug 2019 (10:18 IST)
ಬೆಂಗಳೂರು: ಕಾಂಗ್ರೆಸ್ ನಾಯಕ, ಶಾಸಕ ಡಿಕೆ ಶಿವಕುಮಾರ್ ಜಾರಿ ನಿರ್ದೇಶನಾಲಯ (ಇಡಿ) ಜಾರಿಗೊಳಿಸಿದ್ದ ವಿಚಾರಣೆಯ ಸಮನ್ಸ್ ರದ್ದುಗೊಳಿಸುವಂತೆ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿ ರದ್ದುಗೊಂಡಿದ್ದು, ಮಾಜಿ ಸಚಿವರಿಗೆ ಬಂಧನದ ಭೀತಿ ಎದುರಾಗಿದೆ.
ಇಂದು ದೆಹಲಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ಡಿಕೆಶಿಗೆ ನೋಟಿಸ್ ಕೊಟ್ಟಿದ್ದಾರೆ. ಹೀಗಾಗಿ ಇಂದು ವಿಚಾರಣೆಗೆ ಹಾಜರಾಗುವುದಾಗಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಡಿಕೆಶಿ ಜತೆಗೆ ಅವರ ಆಪ್ತರಾದ ಸಚಿನ್ ನಾರಾಯಣ್, ಸುನಿಲ್ ಕುಮಾರ್ ಶರ್ಮಾ, ಆಂಜನೇಯ ಹನುಮಂತಯ್ಯ ಮತ್ತು ರಾಜೇಂದ್ರ ಅವರ ಅರ್ಜಿಗಳನ್ನೂ ಹೈಕೋರ್ಟ್ ರದ್ದುಗೊಳಿಸಿದೆ. ಹೀಗಾಗಿ ಇವರೂ ವಿಚಾರಣೆಗೆ ಹಾಜರಾಗಬೇಕಾಗುತ್ತದೆ. 2017 ರಲ್ಲಿ ಆದಾಯ ತೆರಿಗೆ ಇಲಾಖೆ ದಾಳಿಯಲ್ಲಿ ಡಿಕೆ ಶಿವಕುಮಾರ್ ಗೆ ಸೇರಿದ್ದು ಎನ್ನಲಾದ ಮನೆಯಲ್ಲಿ 8.50 ಕೋಟಿ ರೂ.ಗೂ ಅಧಿಕ ಲೆಕ್ಕವಿಲ್ಲದ ಹಣ ಪತ್ತೆಯಾಗಿತ್ತು. ಈ ಪ್ರಕರಣ ಡಿಕೆಶಿಗೆ ಉರುಳಾಗಿ ಪರಿಣಮಿಸಿದೆ.