Publish Date: Sun, 02 Jul 2023 (20:55 IST)
Updated Date: Sun, 02 Jul 2023 (20:28 IST)
ವರ್ಗಾವಣೆ ದಂಧೆ ಬಗ್ಗೆ ತಮ್ಮ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಟ್ಟಿರುವ ಹೇಳಿಕೆ ಬಗ್ಗೆ ಕಿಡಿಕಿಡಿಯಾದ ಮಾಜಿ ಮುಖ್ಯಮಂತ್ರಿಗಳು, ನಾನು ಸಿದ್ದರಾಮಯ್ಯ ಅವರನ್ನು ಕೇಳಲು ಬಯಸುತ್ತೇನೆ. ನಾನು ನಿಮ್ಮ ಪಕ್ಷದ ಜತೆ ಸರಕಾರ ರಚನೆ ಮಾಡಿದ್ದಾಗ ನೀವೆಲ್ಲ ಏನೇನು ಮಾಡಿದಿರಿ ಎನ್ನುವುದು ಗೊತ್ತಿದೆ. ಪೊಗದಸ್ತಾದ ಇಲಾಖೆಗಳನ್ನು ಇಟ್ಟುಕೊಂಡಿದ್ದ ನಿಮ್ಮ ಮಂತ್ರಿಗಳು ಏನು ಮಾಡಿದರು? ಮುಖ್ಯಮಂತ್ರಿಯಾಗಿ ನಾನು ಯಾವೊಬ್ಬ ಅಧಿಕಾರಿಯನ್ನು ವರ್ಗಾವಣೆ ಮಾಡುವಂತೆಯೇ ಇರಲಿಲ್ಲ. ಎಲ್ಲ ದಂಧೆಗಳು ಯಾರ ಮೂಗಿನಡಿ ನಡೆಯುತ್ತಿದ್ದವು ಎನ್ನುವುದು ಎಲ್ಲರಿಗೂ ಗೊತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಹಣ ಕೊಟ್ಟು ಪೋಸ್ಟ್ ಪಡೆಯಲು ಬಂದವರನ್ನು ನಾನು ದೂರ ಇಟ್ಟಿದ್ದೆ. ಬಿಡಿಎ ಮೇಲೆ ಬಂದು ಕೊರಲು ಬಂದ ಅಧಿಕಾರಿಗೆ ಹೊರಗಟ್ಟಿದ್ದೆ. ಯಲಹಂಕ ತಹಶಿಲ್ದಾರ್ ಹುದ್ದೆಗೆ ಒಂದೂವರೆ ಕೋಟಿ ಕೊಡ್ತೀವಿ ಅಂದವರನ್ನು ಆಚೆ ಇಟ್ಟಿದ್ದೆ. ಇದು ನಾನು ನಡೆಸಿದ ಆಡಳಿತ. ಈಗ ನೋಡಿದರೆ ವೈಎಸ್ ಟಿ ತೆರಿಗೆ ಅಂತ ಇವರ ಶುರು ಮಾಡಿಕೊಂಡಿದ್ದಾರೆ ಎಂದು ಕಟುವಾಗಿ ಟೀಕೆ ಮಾಡಿದರು.
ಪಕ್ಷದ ಕಚೇರಿಯಲ್ಲಿ ಮಹತ್ವದ ಸಭೆ ಕರೆದಿದ್ದೇವೆ. ಈ ಸರ್ಕಾರ ರಚನೆಯಾಗಿ 50 ದಿನ ಆಗಿದೆ. ಪಕ್ಷವನ್ನು ಹೇಗೆ ಸಂಘಟನೆ ಮಾಡಬೇಕು, ಸರಕಾರದ ವಿರುದ್ಧ ಹೋರಾಟಗಳನ್ನು ಹೇಗೆಲ್ಲಾ ಹಮ್ಮಿಕೊಳ್ಳಬೇಕು ಎಂಬ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸುತ್ತೇವೆ ಎಂದು ಅವರು ಹೇಳಿದರು.ಕಡಿಮೆ ಶಾಸಕರು ಇದ್ದಾರೆ ಎಂದು ನಾವು ಎದೆಗುಂದುವುದಿಲ್ಲ. ಸದನದ ಒಳಗೆ, ಹೊರಗೆ ಹೋರಾಟ ನಡೆಸುತ್ತೇವೆ. ಯಾವ ವಿಷಯಗಳನ್ನು ಕೈಗೆತ್ತಿಕೊಳ್ಳಬೇಕು ಎಂಬ ಬಗ್ಗೆ ಚರ್ಚೆ ಮಾಡುತ್ತೇವೆ. ಗ್ಯಾರಂಟಿ ಬಗ್ಗೆ ನಾನು ಸದನದಲ್ಲಿ ಚರ್ಚೆ ಮಾಡಲ್ಲ. ದೇಶಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಆಗಿದೆ. ಜನರನ್ನು ಇನ್ನೂ ಎಷ್ಟು ವರ್ಷ ಕೈ ಚಾಚುವಂತೆ ಮಾಡ್ತೀರಾ? ಎಂದು ಕೇಳುತ್ತೇವೆ ಎಂದು ಅವರು ಹೇಳಿದರು.
ವಸೂಲಿ ಮಾಡಿ ವರ್ಗಾವಣೆ ಮಾಡುವ ದಂಧೆ ಮಾಡದೇ ವಸೂಲಿ ಶುರುವಾಗಿದೆ. ಅಧಿಕಾರಿಗಳನ್ನು ಮನೆಯಲ್ಲಿ ಕೂರಿಸಿಕೊಂಡು ರಾತ್ರಿ ಒಂದು ಗಂಟೆಯವರೆಗೆ ಸಭೆ ಮಾಡ್ತಾ ಇದ್ದಾರಲ್ಲಾ.. ಅದು ಏತಕ್ಕೆ? ಸರಕಾರಿ ಕಚೇರಿ ಏಕೆ ಸಭೆಗಳನ್ನು ನಡೆಸಲ್ಲ? ಎಂದು ಅವರು ಖಾರವಾಗಿ ಪ್ರಶ್ನಿಸಿದರು.