Publish Date: Wed, 07 Sep 2022 (14:36 IST)
Updated Date: Wed, 07 Sep 2022 (16:41 IST)
ಹಳ್ಳಿಗಳಲ್ಲಿ ಮನೆಮನೆಗೂ ತೆರಳಿ ಕೃಷಿ ಮತ್ತು ಪಶು ವಲಯಕ್ಕೆ ಸಂಬಂಧಿಸಿದಂತೆ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಪಶು ಸಂಗೋಪನಾ ಇಲಾಖೆಯಿಂದ ಜಾರಿಗೊಳಿಸಲಾಗುವ ಯೋಜನೆಗಳು, ಅವುಗಳನ್ನು ಸದುಪಯೋಗ ಮಾಡಿಕೊಳ್ಳುವ ಕುರಿತು ಸಲಹೆಗಳನ್ನು ನೀಡಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಒಂದು ಗ್ರಾಮ ಪಂಚಾಯಿತಿಗೆ ಒಬ್ಬ ಕೃಷಿ ಸಖಿಯರಂತೆ ನೇಮಿಸಲಾಗಿದೆ.
ಪಂಚಾಯಿತಿ ವ್ಯಾಪ್ತಿಯಲ್ಲಿ ಐವರು ಸಖಿಯರನ್ನು ನೇಮಕ ಮಾಡಲಾಗುತ್ತದೆ. ಇವರು ಸಮುದಾಯ ಸಂಪನ್ಮೂಲ ವ್ಯಕ್ತಿಗಳ ರೀತಿಯಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ.
ಈಗಾಗಲೇ ಗ್ರಾಮೀಣ ಸ್ವಸಹಾಯ ಗುಂಪುಗಳ ಸಹಭಾಗಿತ್ವದಲ್ಲಿ ಉದ್ಯೋಗ ಸಖಿಯರ ಯೋಜನೆ ಅಸ್ಥಿತ್ವದಲ್ಲಿದ್ದು ಇದೀಗ ಮತ್ತಷ್ಟು ಸಖಿಯರಿಗೆ ಹೊಸ ಶಕ್ತಿ ತುಂಬುವ ಕಾರ್ಯವನ್ನು ಸರ್ಕಾರ ಮಾಡುತ್ತಿದೆ.
ಕೃಷಿ ಸಖಿಯರ ಸಾಮರ್ಥ್ಯ ಅಭಿವೃದ್ಧಿ ಸಂಬಂಧ ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ತರಬೇತಿ ಕಾರ್ಯಗಾರ ಹಮ್ಮಿಕೊಳ್ಳಲಾಗಿತ್ತು.
ಕೃಷಿ ಜೀವನೋಪಾಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಾದ 30 ಕೃಷಿ ಸಖಿಯರಿಗೆ ಮೊದಲನೇ ಬ್ಯಾಚ್ನ 6 ದಿನಗಳ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ರೇವಣಪ್ಪ, ಸಂಜೀವಿನಿ ತರಬೇತಿ ಶಿಬಿರವು ಸಖಿಯರ ಸಾಮರ್ಥ್ಯ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಹೇಳಿದರು.