Publish Date: Wed, 10 Dec 2025 (18:21 IST)
Updated Date: Wed, 10 Dec 2025 (18:25 IST)
ಬೆಂಗಳೂರು: ರಾಜ್ಯ ಸರ್ಕಾರ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ- 2025 ಅನ್ನು ಬುಧವಾರ ವಿಧಾನಸಭೆಯಲ್ಲಿ ಮಂಡಿಸಿದೆ. ದ್ವೇಷ ಭಾಷಣ ಮಾಡುವವರಿಗೆ ಈ ವಿಧೇಯಕದಲ್ಲಿ ಕಠಿಣ ಕ್ರಮಕ್ಕೆ ಅವಕಾಶ ನೀಡಲಾಗಿದೆ.
ವಿಧಾನಸಭೆಯಲ್ಲಿ ಇಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ದ್ವೇಷ ಭಾಷಣ ಪ್ರತಿಬಂಧಕ ಮಸೂದೆ ಮಂಡಿಸಿದರು. ಇದಕ್ಕೆ ಬಿಜೆಪಿ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು.
ಈ ಮಸೂದೆಯು ಒಂದು ಲಕ್ಷ ರೂ.ಗಳವರೆಗೆ ದಂಡ ಮತ್ತು ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆಗೆ ಅವಕಾಶ ನೀಡುತ್ತದೆ. ಈ ಮಸೂದೆಯನ್ನು ಡಿಸೆಂಬರ್ 4 ರಂದು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅಂಗೀಕರಿಸಲಾಗಿತ್ತು.
ಪರಮೇಶ್ವರ ಅವರು ಮಸೂದೆಯನ್ನು ಮಂಡಿಸಲು ಸದನದ ಅನುಮತಿ ಕೋರಿದಾಗ ಮತ್ತು ಸ್ಪೀಕರ್ ಯು ಟಿ ಖಾದರ್ ಅದನ್ನು ಧ್ವನಿ ಮತಕ್ಕೆ ಹಾಕಿದಾಗ, ವಿರೋಧ ಪಕ್ಷದ ಬಿಜೆಪಿ ಸದಸ್ಯರು ಬೇಡ ಎಂದು ಕೂಗುವ ಮೂಲಕ ಅದನ್ನು ವಿರೋಧಿಸಿದರು.
ಸುನಿಲ್ ಕುಮಾರ್ ಸೇರಿದಂತೆ ಕೆಲವು ಬಿಜೆಪಿ ಸದಸ್ಯರು ಮತಗಳ ವಿಭಜನೆಯನ್ನು ಕೋರಿದರೂ, ಸ್ಪೀಕರ್ ಸದನದಲ್ಲಿ ಮಸೂದೆಯನ್ನು ಮಂಡಿಸುವ ಪ್ರಕ್ರಿಯೆಯನ್ನು ಮುಂದುವರಿಸಿದರು.
ಧರ್ಮ, ಜನಾಂಗ, ಜಾತಿ ಅಥವಾ ಸಮುದಾಯ, ಲಿಂಗ, ಲೈಂಗಿಕ ದೃಷ್ಟಿಕೋನ, ಜನ್ಮಸ್ಥಳ, ವಾಸಸ್ಥಳ, ಭಾಷೆ, ಅಂಗವೈಕಲ್ಯ ಅಥವಾ ಬುಡಕಟ್ಟು ಆಧಾರದ ಮೇಲೆ ಯಾವುದೇ ಪಕ್ಷಪಾತವನ್ನು ದ್ವೇಷ ಭಾಷಣ ಎಂದು ವರ್ಗೀಕರಿಸಲಾಗಿದೆ.
Sampriya
Publish Date: Wed, 10 Dec 2025 (18:21 IST)
Updated Date: Wed, 10 Dec 2025 (18:25 IST)