Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ವರ್ಷಕ್ಕೊಮ್ಮೆ ದರ್ಶನ ಭಾಗ್ಯ ಕಲ್ಪಿಸುವ ಹಾಸನಾಂಬೆ ದೇವಾಲಯದ ಗರ್ಭಗುಡಿಯ ಬಾಗಿಲು ಅಕ್ಟೋಬರ್ 13ಕ್ಕೆ ತೆರೆಯಲಿದೆ. ಆದ್ದರಿಂದ ಜಿಲ್ಲಾಡಳಿತ 15 ದಿನದ ಜಾತ್ರಾ ಮಹೋತ್ಸವಕ್ಕೆ ಎಲ್ಲಾ ರೀತಿಯ ತಯಾರಿಯನ್ನು ಮಾಡಿಕೊಳ್ಳುತ್ತಿದೆ. ಮಹಾಮಾರಿ ಕೊರೊನಾ ನಂತರ ಇದೀಗ ಅದ್ಧೂರಿಯಾಗಿ ಜಾತ್ರಾ ಮಹೋತ್ಸವವನ್ನು ಆಚರಣೆ ಮಾಡುವುದಕ್ಕೆ ಜಿಲ್ಲಾಡಳಿತ ಯೋಜನೆ ರೂಪಿಸಿದೆ.
ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ನಿರೀಕ್ಷೆಯಿದೆ. ಆದ್ದರಿಂದ ಈಗಾಗಲೇ ಶಾಸಕರ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಿಎಂ ಸೇರಿದಂತೆ ರಾಜ್ಯದ ಎಲ್ಲಾ ಗಣ್ಯರನ್ನು ಆಹ್ವಾನಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಹಾಸನಾಂಬ ದೇವಾಲಯದ ಬಾಗಿಲು ಅಕ್ಟೋಬರ್ 13ರಿಂದ ತೆರೆಯಲಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಅಧಿದೇವತೆಯ ದರ್ಶನವನ್ನು ಭಕ್ತರು ಪಡೆಯಬಹುದಾಗಿದೆ. ಒಟ್ಟು 15 ದಿನಗಳ ಕಾಲ ದೇವಾಲಯ ತೆರೆಯಲಿದೆ. ಆಶ್ವಿಜ ಮಾಸದ ಶುಕ್ಲ ಪಕ್ಷದ ಮೊದಲ ಗುರುವಾರದಂದು ಹಾಸನಾಂಬೆಯ ಬಾಗಿಲು ತೆರೆಯಲಿದ್ದು, ಬಲಿಪಾಡ್ಯಮಿಯ ಮಾರನೇಯ ದಿನ ಶಾಸ್ತ್ರೋಕ್ತವಾಗಿ ಗರ್ಭಗುಡಿಗೆ ಬಾಗಿಲು ಹಾಕಲಾಗುತ್ತದೆ. ಈ ವೇಳೆ ಸ್ಥಳೀಯ ಜನಪ್ರತಿನಿಧಿಗಳು ಸೇರಿದಂತೆ ಜಿಲ್ಲಾಧಿಕಾರಿಗಳು ಬಾಗಿಲು ತೆರೆಯುವ ಮತ್ತು ಮುಚ್ಚುವ ವೇಳೆ ಉಪಸ್ಥಿತರಿರುತ್ತಾರೆ. ಕಳೆದ ಎರಡು ವರ್ಷ ಕೊರೊನಾ ಹಿನ್ನೆಲೆ ಭಕ್ತರಿಗೆ ಹಲವು ನಿಬಂಧನೆಗಳನ್ನು ಹಾಕಲಾಗಿತ್ತು. ಈ ಬಾರಿ ಅದ್ಧೂರಿಯಾಗಿ ಹಾಸನಾಂಬೆ ದೇವಿಯ ಜಾತ್ರಾ ಮಹೋತ್ಸವ ನಡೆಯಲಿದೆ.