Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ರಾಜ್ಯದಲ್ಲಿ ಹಿಜಾಬ್-ಕೇಸರಿ ವಿವಾದ ತಾರಕಕ್ಕೇರಿದೆ. ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ, ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥ ನಾರಾಯಣ ಭಾಗವಹಿಸಲಿದ್ದಾರೆ.
ಹಿಜಾಬ್-ಕೇಸರಿ ವಿವಾದ, ಮುಂದಿನ ಕ್ರಮಗಳು,ಪ್ರತಿ ಜಿಲ್ಲೆ ಸ್ಥಿತಿಗತಿ ಬಗ್ಗೆ ಸಿಎಂ ಮಾಹಿತಿ ಪಡೆಯಲಿದ್ದು, ಮುಂದಿನ ಕ್ರಮಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಹಿಜಾಬ್-ಕೇಸರಿ ವಿವಾದ ಹೈಕೋರ್ಟ್ ತಲುಪಿದ್ದು, ಇಂದು ಮಧ್ಯಾಹ್ನ ಹೈಕೋರ್ಟ್ನ ಏಕಸದಸ್ಯಪೀಠ ಸುದೀರ್ಘ ವಿಚಾರಣೆ ನಡೆಸಿ, ತೀರ್ಪು ನೀಡಲಿದೆ.
ರಾಜ್ಯದಲ್ಲಿ ಹಿಜಾಬ್-ಕೇಸರಿ ವಿವಾದ ವಿಕೋಪಕ್ಕೆ ತಿರುಗಿದೆ. ಹಲವೆಡೆ ಕಲ್ಲು ತೂರಾಟ ನಡೆಯುತ್ತಿದೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಇಂದಿನಿಂದ ಮೂರು ದಿನ ೯ನೇ ತರಗತಿಯಿಂದ ಕಾಲೇಜುವರೆಗೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.