Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕೈಗೊಂಡಿರುವ ಪ್ರಜಾಧ್ವನಿ ರಥಯಾತ್ರೆ ಪುನಾರಂಭವಾಗಿದೆ. ಇದಕ್ಕಾಗಿ ಹೊಸಪೇಟೆ ಹಾಗೂ ಕೊಪ್ಪಳದಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿತ್ತು. ಹೊಸಪೇಟೆಯ ಪುನೀತ್ ರಾಜ್ಕುಮಾರ್ ಜಿಲ್ಲಾ ಕ್ರೀಡಾಂಗಣ ಹಾಗೂ ಮಧ್ಯಾಹ್ನ 4 ಗಂಟೆಗೆ ಕೊಪ್ಪಳದ ತಾಲೂಕು ಕ್ರೀಡಾಂಗಣದಲ್ಲಿ ನಡೆಯುವ ಬೃಹತ್ ಸಮಾವೇಶದ ಮೂಲಕ ಶಕ್ತಿ ಪ್ರದರ್ಶನಕ್ಕೆ ಕೈ ಪಡೆ ಮುಂದಾಗಿದೆ. ಬಳ್ಳಾರಿ, ವಿಜಯನಗರ ಹಾಗೂ ಕೊಪ್ಪಳ ಜಿಲ್ಲೆಗಳ 15 ಸ್ಥಾನಗಳ ಮೇಲೆ ಕಣ್ಣಿಟ್ಟಿರುವ ಕೈ ಪಡೆ ಪ್ರಜಾಧ್ವನಿ ಯಾತ್ರೆಯ ಮೂಲಕ ಕಾಂಗ್ರೆಸ್ ಪರ ಅಲೆ ಸೃಷ್ಟಿಸುವ ಇರಾದೆ ಹೊಂದಿದೆ. ವಿಧಾನಸಭಾ ಚುನಾವಣೆಯ ಅಧಿಕೃತ ಪ್ರಚಾರಾಂದೋಲನಕ್ಕೆ ಜ.11ರಂದು ಚಾಲನೆ ನೀಡಿದ್ದ ಕಾಂಗ್ರೆಸ್, ಬೆಳಗಾವಿಯಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರು ತಂಗಿದ್ದ ಗಾಂಧಿ ಬಾವಿಯಲ್ಲಿ ಪ್ರಜಾಧ್ವನಿ ರಥಯಾತ್ರೆಗೆ ಚಾಲನೆ ನೀಡಿತ್ತು. ಸಂಕ್ರಾಂತಿ ಹಿನ್ನೆಲೆಯಲ್ಲಿ ಯಾತ್ರೆಯನ್ನು 5 ದಿನಗಳ ಕಾಲ ಮುಂದೂಡಲಾಗಿತ್ತು. ಇಂದು ಹೊಸಪೇಟೆಯಿಂದ ಯಾತ್ರೆ ಪುನಾರಂಭಗೊಂಡಿದೆ.