Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ರಾಜ್ಯದಾದ್ಯಂತ ಕಳೆದ ಒಂದು ವಾರದಿಂದ ನಿರಂತರ ಮಳೆಯಾಗುತ್ತಲೇ ಇದೆ. ಇದರ ನಡುವೆ ಹವಾಮಾನ ಇಲಾಖೆ ವಾಯು ಭಾರ ಕುಸಿತದ ಎಚ್ಚರಿಕೆ ನೀಡಿದ್ದು ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಇಂದು ಎಲ್ಲೆಲ್ಲಾ ಮಳೆಯಾಗಲಿದೆ ಇಲ್ಲಿದೆ ವಿವರ.
ವಿಶೇಷವಾಗಿ ಈ ಬಾರಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇದು ಇನ್ನೂ ನಾಲ್ಕೈದು ದಿನಗಳಿಗೆ ಮುಂದುವರಿಯುವ ನಿರೀಕ್ಷೆಯಿದೆ. ಇದರ ಜೊತೆಗೆ ಹವಾಮಾನ ಇಲಾಖೆ ವಾಯು ಭಾರ ಕುಸಿತ, ಸೈಕ್ಲೋನ್ ಮುನ್ನೆಚ್ಚರಿಕೆ ನೀಡಿದೆ.
ನೈಋತ್ಯ ಬಾಂಗ್ಲಾದೇಶ ಮತ್ತು ಪಶ್ಚಿಮ ಬಂಗಾಲದ ಕೆಲವು ಭಾಗಗಳಲ್ಲಿ ವಾಯುಭಾರ ಮತ್ತಷ್ಟು ಕುಸಿಯಲಿದ್ದು, ಹೆಚ್ಚಿನ ಮಳೆ ನಿರೀಕ್ಷಿಸಲಾಗಿದೆ. ಇದರಿಂದಾಗಿ ಒಳನಾಡು ಮತ್ತು ಭಾರತದ ಪೂರ್ವಭಾಗಗಳಲ್ಲಿ ಭಾರೀ ಮಳೆ ನಿರೀಕ್ಷಿಸಲಾಗಿದೆ.
ಕರ್ನಾಟಕದ ವಿಚಾರಕ್ಕೆ ಬಂದರೆ ಇಂದೂ ದಕ್ಷಿಣ ಭಾಗಗಳಲ್ಲಿ ಭಾರೀ ಮಳೆ ನಿರೀಕ್ಷಿಸಲಾಗಿದೆ. ವಿಶೇಷವಾಗಿ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದೂ ಭಾರೀ ಮಳೆಯಾಗಲಿದೆ. ಆದರೆ ಕರ್ನಾಟಕದ ಉತ್ತರದ ಜಿಲ್ಲೆಗಳಲ್ಲಿ ಇಂದು ಮಳೆಯ ಅಬ್ಬರ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ. ಉಳಿದಂತೆ ಬೆಂಗಳೂರು, ಮೈಸೂರು, ಮಂಡ್ಯ, ಕೋಲಾರ, ತುಮಕೂರು, ಹಾಸನ ಮೊದಲಾದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ.