Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಕೋರೋನಾ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೇರಳದಲ್ಲಿ ಹೆಚ್ಚುತ್ತಿರುವ ಪ್ರಕರಣಗಳಿಂದಾಗಿ ರಾಜ್ಯ ಸರಕಾರ ಎಚ್ಚೆತ್ತುಗೊಂಡಿದ್ದು ಒಂದು ವಾರಗಳ ಕಾಲ ಕಾಸರಗೋಡಿಗೆ ಬಸ್ ಸಂಚಾರ ಬಂದ್ ಮಾಡಲಾಗಿದೆ. ಯಾವುದೇ ರೀತಿಯ ವಾಹನ ಸಂಚಾರಗಳಿಗೆ ಅನುಮತಿಯಿರುವುದಿಲ್ಲವೆಂದು ಸರಕಾರ ಸ್ಪಷ್ಟಪಡಿಸಿದೆ.
ಕೊರೋನಾ ಮೂರನೇ ಅಲೆ ನಿಯಂತ್ರಣ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದ್ಯಕ್ಕೆ ಸಾರ್ವಜನಿಕ ಕಾರ್ಯಕ್ರಮಗಳು, ಸಭೆ-ಸಮಾರಂಭಗಳಿಗೆ ಬ್ರೇಕ್ ಹಾಕಲಾಗಿದೆ. ಸಭೆ-ಸಮಾರಂಭಗಳು, ರಾಜಕೀಯ, ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ಆಗಸ್ಟ್ 10ರವರೆಗೆ ನಡೆಸದಂತೆ ಕ್ರಮ ಕೈಗೊಳ್ಳಲಾಗುವುದು.ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ಕೇರಳದಿಂದ ಕರ್ನಾಟಕಕ್ಕೆ ಬರುವ ವಿದ್ಯಾರ್ಥಿಗಳಿಗೆ ಕೊರೋನಾ ನೆಗೆಟಿವ್ ವರದಿ ಕಡ್ಡಾಯವಾಗಿದೆ. ಅಲ್ಲದೇ ವಿದ್ಯಾರ್ಥಿ ನಿಲಯಗಳಲ್ಲಿಯೇ ಕ್ವಾರಂಟೈನ್ ಮಾಡಬೇಕಿದೆ. ಕುಟುಂಬದಲ್ಲಿ ಇಬ್ಬರಿಗಿಂತ ಹೆಚ್ಚಿನವರಿಗೆ ಸೋಂಕು ಕಂಡುಬಂದರೆ ಅಂತಹ ಮನೆಯನ್ನು ಮೈಕ್ರೋ ಕಂಟೈನ್ಮೆಂಟ್ ಜೋನ್ ಎಂದು ಘೋಷಿಸಲಾಗುವುದಾಗಿ ಸರಕಾರ ಎಚ್ಚರಿಸಿದೆ.