Publish Date: Sat, 22 Oct 2022 (16:52 IST)
Updated Date: Sat, 22 Oct 2022 (16:57 IST)
ACB ರದ್ದುಗೊಂಡ ನಂತರ ರಾಜ್ಯದಲ್ಲಿ ಭ್ರಷ್ಟರ ಬೇಟೆಯಾಡುತ್ತಿರುವ ಲೋಕಾಯುಕ್ತ ಅಲ್ಲೊಂದು ಇಲ್ಲೊಂದು ಬೇಟೆಯಾಡುತ್ತಲೇ ಇದೆ. ನಿನ್ನೆ ಬೆಂಗಳೂರು, ಕೊಡಗು, ಮೈಸೂರಿನಲ್ಲಿ ಒಟ್ಟು ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿತ್ತು. ಇಂದು ಚಿಕ್ಕಬಳ್ಳಾಪುರದಲ್ಲಿ ಮತ್ತು ಕೋಲಾರದಲ್ಲಿ ಬೇಟೆ ಆರಂಭಿಸಿದೆ. ವಾಹನ ಚಾಲಕರಿಂದ ಹೆಚ್ಚುವರಿ ಹಣ ವಸೂಲಿ ಆರೋಪ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ RTO ಚೆಕ್ಪೋಸ್ಟ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44ರಲ್ಲಿರುವ ಈ ಚೆಕ್ಪೋಸ್ಟ್ ಮೇಲೆ ದಾಳಿ ನಡೆಸಿದಾಗ ಹಣ ಪತ್ತೆಯಾದ ಹಿನ್ನೆಲೆ ಅಧಿಕಾರಿಗಳು ದಾಖಲೆಗಳ ಜೊತೆ ಹಣದ ಮೂಲದ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಚಿಕ್ಕಬಳ್ಳಾಪುರ ಲೋಕಾಯುಕ್ತ SP ಪವನ್ ನೆಜ್ಜೂರು ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. RTO ಇನ್ಸ್ಪೆಕ್ಟರ್ ಮಹಾದೇವಪ್ಪ ಮತ್ತು ಸಿಬ್ಬಂದಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.