Publish Date: Sun, 25 Aug 2019 (18:00 IST)
Updated Date: Sun, 25 Aug 2019 (18:02 IST)
ಕೇಂದ್ರ ಸರ್ಕಾರದ ನೆರೆಹಾನಿ ಅಧ್ಯಯನ ತಂಡದ ಸದಸ್ಯರು ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿದ್ರು.
ಪ್ರವಾಹ ಸಂತ್ರಸ್ತರಿಗೆ ಆದಷ್ಟು ಬೇಗನೇ ಪರಿಹಾರ ಬಿಡುಗಡೆ ಮಾಡುವುದು ನಮ್ಮ ಆದ್ಯತೆಯಾಗಿದೆ ಎಂದು ಕೇಂದ್ರ ಸರ್ಕಾರದ ನೆರೆಹಾನಿ ಅಧ್ಯಯನ ತಂಡದ ನೇತೃತ್ವ ವಹಿಸಿದ್ದ ಕೇಂದ್ರ ಗೃಹ ವ್ಯವಹಾರಗಳ ಇಲಾಖೆಯ ಆಡಳಿತ ವಿಭಾಗದ ಜಂಟಿ ನಿರ್ದೇಶಕರಾದ ಶ್ರೀ ಪ್ರಕಾಶ್ ತಿಳಿಸಿದ್ರು.
ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಂಚರಿಸಿ ಹಾನಿಯನ್ನು ಪರಿಶೀಲಿಸಿದ ಬಳಿಕ, ಕಾಗವಾಡ ಸಮೀಪದ ಶೇಡಬಾಳ ಪ್ರವಾಸಿಮಂದಿರದಲ್ಲಿ ಸುದ್ದಿಗಾರರ ಜತೆ ಮಾತನಾಡಿದರು.
ಕೇಂದ್ರ ತಂಡದ ಏಳು ಅಧಿಕಾರಿಗಳು ಮೊದಲ ದಿನವಾದ ಇಂದು ಬೆಳಗಾವಿ ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳಲ್ಲಿ ಸಂಚರಿಸಿ, ಹಾನಿಯನ್ನು ಪರಿಶೀಲಿಸಿದೆ.
ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹದಿಂದ ಅತ್ಯಂತ ಕೆಟ್ಟ ಪರಿಸ್ಥಿತಿ ಕಂಡುಬಂದಿದೆ. ಕಬ್ಬಿನ ಬೆಳೆ ಭಾರೀ ಪ್ರಮಾಣದಲ್ಲಿ ಹಾನಿಯಾಗಿದ್ದು, ಸುಧಾರಣೆಗೆ ಸಾಕಷ್ಟು ಸಮಯ ಬೇಕು ಎಂದರು.
ಕೇಂದ್ರ ತಂಡದಿಂದ ಮತ್ತೊಮ್ಮೆ ಪರಿಶೀಲನೆ:
ಪ್ರವಾಹ ಮತ್ತು ಮಳೆಯಿಂದ ಉಂಟಾಗಿರುವ ಹಾನಿಯ ಬಗ್ಗೆ ರಾಜ್ಯ ಸರ್ಕಾರದ ಪರಿಹಾರ ಪ್ರಸ್ತಾವ ಆಧರಿಸಿ ಮತ್ತೊಮ್ಮೆ ಕೇಂದ್ರ ತಂಡವು ಪರಿಶೀಲನೆ ಕೈಗೊಳ್ಳಲಿದೆ. ಆ ತಂಡದ ವರದಿ ಆಧರಿಸಿ ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆಗೆ ಸಂಬಂಧಿಸಿದಂತೆ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಶ್ರೀ ಪ್ರಕಾಶ್ ತಿಳಿಸಿದ್ರು.
ಬೆಳೆಹಾನಿಯ ಸಮೀಕ್ಷೆ ನಡೆದಿದ್ದು, ರಾಜ್ಯ ಸರ್ಕಾರದ ವರದಿಯನ್ನು ಆಧರಿಸಿ ಕೇಂದ್ರ ತಂಡದ ಮತ್ತೊಂದು ಭೇಟಿಯನ್ನು ನಿಗದಿಪಡಿಸಲಾಗುವುದು ಎಂದರು.