Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಸಾಗರದಲ್ಲಿ ದಯಾಮರಣಕ್ಕೆ ಮತ್ತೊಂದು ಅರ್ಜಿ ಬಂದಿದ್ದು, ಕಳೆದೊಂದು ತಿಂಗಳಲ್ಲಿ ದಯಾಮರಣಕ್ಕೆ ಮೂರನೇ ಅರ್ಜಿ ಬಂದಂತಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಅರ್ಜಿ ಬಂದಿದೆ. ದಯಾಮರಣಕ್ಕೆ ಅರ್ಜಿ ಸಲ್ಲಿಸಿದವರಿಗೆ ಎ.ಸಿ ಪಲ್ಲವಿ ಸಾತೇನಹಳ್ಳಿ ಹಾಗೂ ತಹಸೀಲ್ದಾರ್ ಮಲ್ಲೇಶ್ ಪೂಜಾರ್ ಬುದ್ದಿ ಹೇಳಿ ಕಳುಹಿಸಿದ್ದಾರೆ. ತಮ್ಮ ಕುಟುಂಬ ಅನುಭವಿಸುತ್ತಿರುವ ಸಂಕಷ್ಟಕ್ಕೆ ಆಡಳಿತ ಸ್ಪಂದಿಸುತ್ತಿಲ್ಲ, ನಾವು ಬದುಕುವುದು ಕಷ್ಟ ಸಾಧ್ಯ ಎನ್ನುವ ಸ್ಥಿತಿ ನಿರ್ಮಾಣವಾಗಿದೆ, ಎಂದು ಹೇಳಿ ದಯಾಮರಣಕ್ಕೆ ಅವಕಾಶ ಕಲ್ಪಿಸುವಂತೆ ಮನವಿ ಮಾಡಿದ್ದಾರೆ. ಚನ್ನಗೊಂಡ ಗ್ರಾಮ ಪಂಚಾಯಿತಿಯ ಗುಂಡೋಡಿ ಗ್ರಾಮದ ಧರ್ಮಪ್ಪ ಕುಟುಂಬದಿಂದ ಅರ್ಜಿ ಸಲ್ಲಿಕೆಯಾಗಿದೆ. ಕಳೆದ 25 ವರ್ಷಗಳಿಂದ ಆಸ್ತಿ ವಿಚಾರವಾಗಿ ನನ್ನ ಸಹೋದರ ನಾರಾಯಣಪ್ಪ ಗುಂಡೋಡಿ ಮತ್ತು ಆತನ ಕುಟುಂಬ ಸದಸ್ಯರು ನಮಗೆ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡುತ್ತಿದ್ದಾರೆಂದು ಆರೋಪ ಮಾಡಿದ್ದಾರೆ. ತಮಗೆ ರಕ್ಷಣೆ ನೀಡುವಂತೆ ಕಂದಾಯ ಇಲಾಖೆ ಮತ್ತು ಕಾರ್ಗಲ್ ಪೊಲೀಸ್ ಠಾಣೆಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.