Publish Date: Sat, 13 Aug 2022 (20:13 IST)
Updated Date: Sat, 13 Aug 2022 (20:16 IST)
ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮದಲ್ಲಿ ನಡೆದ ಗುಂಪು ಘರ್ಷಣೆಯಲ್ಲಿ ಇಬ್ಬರು ಸಾವನ್ನಪ್ಪಿದ ಪ್ರಕರಣ ಸಂಬಂಧ 15ಕ್ಕೂ ಹೆಚ್ಚು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ದಿನಗಳ ಹಿಂದೆ ಕ್ಷುಲ್ಲಕ ಕಾರಣಕ್ಕೆ ನಡೆದಿದ್ದ ಜಗಳದಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಪೊಲೀಸರು ತುಮಕೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಂಧಿಸಿದ್ದಾರೆ. ತಿರುಪತಿ, ಧರ್ಮಸ್ಥಳದಲ್ಲೂ ಆರೋಪಿಗಳು ತಲೆಮರೆಸಿಕೊಂಡಿರುವ ಮಾಹಿತಿ ತಿಳಿದುಬಂದಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸ್ ಅಧೀಕ್ಷಕರು ರಚಿಸಿದ 6 ತನಿಖಾ ತಂಡಗಳು ಶೋಧಕಾರ್ಯದಲ್ಲಿ ತೊಡಗಿವೆ..ಘಟನೆಯ ನಂತರ ಘರ್ಷಣೆಯಲ್ಲಿ ಭಾಗಿಯಾಗಿದ್ದ ಅನೇಕರು ಬೇರೆಬೇರೆ ಜಿಲ್ಲೆಗಳಲ್ಲಿ ತಲೆಮರೆಸಿಕೊಂಡಿದ್ದರು. ನಡೆದ ಗುಂಪು ಘರ್ಷಣೆ ಸಂಬಂಧ 58 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಪೈಕಿ 15ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ. ತುಮಕೂರು, ಬಾಗಲಕೋಟೆ, ಬದಾಮಿ ಜಿಲ್ಲೆಯಲ್ಲಿ ಈ ಆರೋಪಿಗಳು ತಲೆಮರೆಸಿಕೊಂಡಿದ್ದರು. ಇವರ ಸುಳಿವು ಪಡೆದ ಪೊಲೀಸರು ಇದೀಗ ಬಂಧಿಸಿದ್ದಾರೆ..ಉಳಿದ ಆರೋಪಿಗಳ ಬಂಧನಕ್ಕೆ ಕೊಪ್ಪಳ ಎಸ್ಪಿ ಅರುಣಾಂಗ್ಷು ಗಿರಿ ಅವರು 6 ವಿಶೇಷ ತಂಡಗಳನ್ನು ರಚಿಸಿದ್ದಾರೆ. ಸದ್ಯ ಬಂಧಿತರಾಗಿರುವ ಆರೋಪಿಗಳನ್ನು ಪೊಲೀಸರು ಹೆಚ್ಚಿನ ತನಿಖೆಗೆ ಒಳಪಡಿಸಿದ್ದಾರೆ.