Publish Date: Mon, 09 Aug 2021 (22:32 IST)
Updated Date: Mon, 09 Aug 2021 (22:35 IST)
ಬೆಂಗಳೂರು: ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಬಾರಿ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮ ಇರುವುದಿಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದರು.
ಭಾರತ ಬಿಟ್ಟು ತೊಲಗಿ ಚಳುವಳಿ ದಿನದ ಅಂಗವಾಗಿ ನಗರದ ಎಂ.ಜಿ. ರಸ್ತೆಯ ಮಹಾತ್ಮಗಾಂಧಿ ಉದ್ಯಾನವನದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಗೆ ಪಾಲಿಕೆ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಹಾಗೂ ಮುಖ್ಯ ಆಯುಕ್ತ ಗೌರವ್ ಗುಪ್ತ ಮಾಲಾರ್ಪಣೆ ಹಾಗೂ ಪುಷ್ಪನಮನ ಸಲ್ಲಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಬಿಎಂಪಿ ಮು
ಖ್ಯ ಆಯುಕ್ತ ಗೌರವ್ ಗುಪ್ತ, ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಧ್ವಜರೋಹಣ ನೆರವೇರಿಸಲಿದ್ದಾರೆ. ಕಳೆದ ವರ್ಷದಂತೆ ಈ ಬಾರಿಯೂ ಸಾರ್ವಜನಿಕರ ಪ್ರವೇಶವನ್ನು ತಡೆಯಲಾಗಿದ್ದು, ಗಣ್ಯ ವ್ಯಕ್ತಿಗಳು ಹಾಗೂ ಆಹ್ವಾನಿತರಿಗೆ ಮಾತ್ರ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಕಡಿಮೆ ಜನರನ್ನು ಸೇರಿಸುವ ಬಗ್ಗೆ ಚಿಂತನೆ ನಡೆಯುತ್ತಿದೆ. ಸ್ವಾತಂತ್ರ್ಯ ದಿನಾಚರಣೆ ಹೇಗೆ ನಡೆಯಬೇಕು ಎಂಬ ಬಗ್ಗೆ ಶೀಘ್ರವೆ, ಮುಖ್ಯಮಂತ್ರಿಗಳು ಅಧಿಕೃತ ಆದೇಶ ಹೊರಡಿಸಲಿದ್ದಾರೆ ಎಂದು ಹೇಳಿದರು.