Publish Date: Fri, 10 May 2024 (15:41 IST)
Updated Date: Fri, 10 May 2024 (15:44 IST)
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್ಡ್ರೈವ್ ಹಂಚಿಕೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ಇದೀಗ ವಕೀಲ, ಬಿಜೆಪಿ ಮುಖಂಡ ಜಿ. ದೇವರಾಜೇಗೌಡ ಹಾಗೂ ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್ ಅವರಿಗೆ ಎಸ್ಐಟಿ ನೋಟಿಸ್ ನೀಡಿದೆ.
ಪೆನ್ಡ್ರೈವ್ ಹಂಚಿಕೆ ಸಂಬಂಧ ಜೆಡಿಎಸ್ ಚುನಾವಣಾ ಏಜೆಂಟ್ ಪೂರ್ಣಚಂದ್ರ ತೇಜಸ್ವಿ ಅವರು ಹಾಸನದ ಸೈಬರ್ ಠಾಣೆಗೆ ಈಚೆಗೆ ದೂರು ನೀಡಿದ್ದರು. ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್, ಪುಟ್ಟರಾಜು, ಕ್ವಾಲಿಟಿ ಬಾರ್ ಶರತ್, ನವೀನ್ಗೌಡ ಹಾಗೂ ಚೇತನ್ಗೌಡ ವಿರುದ್ಧ ಪ್ರಕರಣ ದಾಖಲಾಗಿತ್ತು.
ಆರೋಪಿಗಳು ನಗರದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ, ನ್ಯಾಯಾಲಯ ಅರ್ಜಿ ತಿರಸ್ಕರಿಸಿತ್ತು. ಇನ್ನೊಂದೆಡೆ ಜೆಡಿಎಸ್ ಕೂಡ ಆರೋಪಿಗಳನ್ನು ಬಂಧಿಸಬೇಕು. ಈ ಪ್ರಕರಣದಲ್ಲಿ ಎಸ್ಐಟಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿತ್ತು.
ಎಸ್ಐಟಿಯಿಂದ ಜಿ. ದೇವರಾಜೇಗೌಡ ಹಾಗೂ ಕಾರ್ತಿಕ್ ಅವರಿಗೆ ನೋಟಿಸ್ ನೀಡಲಾಗಿದ್ದು, ವಿಚಾರಣೆಯ ನಂತರ ಪೆನ್ಡ್ರೈವ್ ಹಂಚಿಕೆ ಸಂಬಂಧ ಮಾಹಿತಿ ಲಭ್ಯವಾಗಬಹುದು ಎಂದು ಮೂಲಗಳು ತಿಳಿಸಿವೆ.