Publish Date: Mon, 13 Jun 2022 (13:08 IST)
Updated Date: Mon, 13 Jun 2022 (13:09 IST)
ಬೆಂಗಳೂರು : ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ರಾಜ್ಯ ರಾಜಧಾನಿ ಬೆಂಗಳೂರಿಗೆ ಎರಡು ದಿನಗಳ ಭೇಟಿಗಾಗಿ ಸೋಮವಾರ ಆಗಮಿಸಲಿದ್ದಾರೆ ಹಾಗೂ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಸೋಮವಾರದಂದು 11.40 ಕ್ಕೆ ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಷ್ಟ್ರಪತಿಗಳನ್ನು ಬರಮಾಡಿಕೊಳ್ಳಲಿದ್ದಾರೆ. ಸಂಜೆ 4.30ಕ್ಕೆ ಬೆಂಗಳೂರಿನ ರಾಷ್ಟ್ರೀಯ ಮಿಲಿಟರಿ ಸ್ಕೂಲ್ನ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ರಾಷ್ಟ್ರಪತಿಗಳು ಉದ್ಘಾಟಿಸಲಿದ್ದಾರೆ.
ರಾಷ್ಟ್ರೀಯ ಮಿಲಿಟರಿ ಸ್ಕೂಲ್ನ ಚಾಣಕ್ಯ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಕೇಂದ್ರ, ರಾಜ್ಯ ಸರ್ಕಾರದ ಗಣ್ಯರು, ಸೇನೆಯ ಹಿರಿಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ.
ರಾಷ್ಟ್ರಪತಿಯವರು ಸೋಮವಾರ ರಾತ್ರಿ ರಾಜಭವನದಲ್ಲಿ ತಂಗಲಿದ್ದಾರೆ. ಮಂಗಳವಾರ ಪೂರ್ವಾಹ್ನ 11.30 ವಸಂತಪುರದ ವೈಕುಂಠ ಗಿರಿಯಲ್ಲಿ ಇಸ್ಕಾನ್ನವರು ನಿರ್ಮಿಸಿರುವ ಶ್ರೀ ರಾಜಾಧಿಕಾರ ಗೋವಿಂದ ದೇಗುಲದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಆ ಬಳಿಕ ಗೋವಾಕ್ಕೆ ನಿರ್ಗಮಿಸಲಿದ್ದು ಅಲ್ಲಿ ಬುಧವಾರ ಅಲ್ಲಿ ನಡೆಯಲಿರುವ ಹೊಸ ರಾಜಭವನದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.