Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಮೂರು ಕೃಷಿ ವಿರೋಧಿ ಕಾಯ್ದೆಗಳನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು ಮತ್ತು ಎಂಎಸ್ಪಿ ಖಾತ್ರಿಪಡಿಸಬೇಕೆಂದು ಆಗ್ರಹಿಸಿ ಮಾ.21ರಿಂದ ಮೂರು ದಿನಗಳ ಕಾಲ ರಾಜ್ಯ ರೈತ ಸಂಘದಿಂದ ಬೃಹತ್ ಬೆಂಗಳೂರು ಚಲೋ ಮತ್ತು ಪರ್ಯಾಯ ಜನಾಧಿವೇಶನ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತಸಂಘದ ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ ತಿಳಿಸಿದರು.
ಶುಕ್ರವಾರ ನಗರದಲ್ಲಿಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾ.21ರಂದು ಬೆಂಗಳೂರಿನ ಫ್ರಿಡಂ ಪಾರ್ಕ್ನಲ್ಲಿ ಬೃಹತ್ ಅಧಿವೇಶನ ಮತ್ತು ಮಾ.22 ಮತ್ತು 23ರಂದು ಪರ್ಯಾಯ ಜನಾಧಿವೇಶನವನ್ನು ಆಯೋಜಿಸಲಾಗಿದೆ. ಈ ಅಧಿವೇಶನದಲ್ಲಿ ಜಿಲ್ಲೆಯ ರೈತರು, ದಲಿತ, ಕಾರ್ಮಿಕರು, ಮಹಿಳೆಯರು ಯುವ ಜನತೆ ಪಾಲ್ಗೊಳ್ಳುವಂತೆ ವಿನಂತಿಸಿದರು.
ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ವಾಪಸ್ ಪಡೆದುಕೊಂಡಿದೆ. ಆದರೆ, ರಾಜ್ಯ ಸರ್ಕಾರ ಎಂಪಿಎಂಸಿ ತಿದ್ದುಪಡಿ ಕಾಯ್ದೆ, ಭೂ ಸುಧಾರಣೆ ಕಾಯ್ದೆ, ಜಾನುವಾರು ಹತ್ಯೆ ನಿಷೇಧ ಕಾಯ್ದೆ ಹಿಂಪಡೆದುಕೊಂಡಿಲ್ಲ, ಈ ಕಾಯ್ದೆಗಳನ್ನು ಹಿಂಪಡೆದುಕೊಳ್ಳುವಂತೆ ಸಂಘಟನೆಗಳ ಐಕ್ಯ ವೇದಿಕೆ ಸಂಯುಕ್ತ ಹೋರಾಟ ಹಮ್ಮಿಕೊಂಡಿದೆ ಎಂದರು.
ಈ ಹಿಂದೆ ರೈತರಿಗೆ ಅನುಕೂಲವಾಗುವ ಕಾಯ್ದೆಗಳನ್ನು ತರುವಂತೆ ಹೋರಾಟ ಮಾಡಲಾಗುತ್ತಿತ್ತು. ಆದರೆ ಇಂದು ರೈತ ವಿರೋಧಿ ಮಸೂದೆಗಳನ್ನು ಹಿಂಪಡೆಯುವಂತೆ ಹೋರಾಟ ಮಾಡುವ ಸ್ಥಿತಿ ಬಂದಿರುವುದು ಶೋಚನೀಯ ಎಂದು ವಿಷಾದಿಸಿದರು.