Publish Date: Sun, 30 Oct 2022 (20:40 IST)
Updated Date: Sun, 30 Oct 2022 (20:42 IST)
ಪೇದೆ ಆಯ್ಕೆಗೆ ಅರ್ಜಿ ಆಹ್ವಾನಿಸಿರುವ ಕೇಂದ್ರ ಸಿಬ್ಬಂದಿ ಆಯ್ಕೆ ಆಯೋಗ ಹಿಂದಿ, ಇಂಗ್ಲೀಷ್ನಲ್ಲಿ ಮಾತ್ರ ಪರೀಕ್ಷೆ ಬರೆಯುವ ಅವಕಾಶ ನೀಡಿದೆ. ಈ ಕುರಿತು ಸಿದ್ದರಾಮಯ್ಯ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಕೇಂದ್ರ ಸಿಬ್ಬಂದಿ ಆಯ್ಕೆ ಆಯೋಗ ನಾನಾ ಭದ್ರತಾ ಪಡೆಗಳ ಸಿಬ್ಬಂದಿ ಆಯ್ಕೆಗೆ ಜನವರಿಯಲ್ಲಿ ನಡೆಸಲಿರುವ ಪರೀಕ್ಷೆಗಳಿಂದ ಕನ್ನಡವನ್ನು ಕೈಬಿಟ್ಟು ನಾಡಿನ ಯುವ ಸಮೂಹದ ಸಹನೆಯನ್ನು ಕೇಂದ್ರ ಸರ್ಕಾರ ತೀವ್ರವಾಗಿ ಕೆಣಕುತ್ತಿದ್ದು, ಇದನ್ನು ಇನ್ನು ಸಹಿಸಲು ಸಾಧ್ಯವಿಲ್ಲ ಎಂದು ಖಂಡಿಸಿದ್ದಾರೆ. ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ನೇತೃತ್ವದ ಅಧಿಕೃತ ಭಾಷೆಗಳ ಸಂಸತ್ತಿನ ಸಮಿತಿಯು ಇತ್ತೀಚಿಗೆ ರಾಷ್ಟ್ರಪತಿಗಳಿಗೆ ನೀಡಿದ 11ನೇ ವರದಿಯಲ್ಲಿ ಎಲ್ಲಾ ರಾಜ್ಯಗಳಲ್ಲಿ ಸ್ಥಳೀಯ ಭಾಷೆಗಳಿಗೆ ಆದ್ಯತೆ ನೀಡಬೇಕು ಎಂದು ಶಿಫಾರಸ್ಸು ಮಾಡಿದೆ. ಕಲಿಕೆಯಲ್ಲಿ ಮಾತೃಭಾಷೆಗಳಿಗೆ ಆದ್ಯತೆ ನೀಡಿದ ಬಳಿಕ ಉದ್ಯೋಗದ ಪ್ರಶ್ನೆ ಬಂದಾಗ ಮಾತ್ರ ಹಿಂದಿಯಲ್ಲೇ ಪ್ರವೇಶ ಪರೀಕ್ಷೆ ಬರೆಯಬೇಕು ಎನ್ನುವುದು ಕಪಟತನವಾಗುತ್ತದೆ. ರಾಷ್ಟ್ರಕವಿ ಕುವೆಂಪು ಅವರು ಇದನ್ನೇ ತ್ರಿಭಾಷಾ ಶೂಲ ಎಂದು ಕರೆದಿದ್ದಾರೆ. ಕೋಟಿ ಕಂಠಗಳಲ್ಲಿ ಕನ್ನಡ ಗೀತೆ ಹಾಡಿಸಿದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಪ್ರತಿಯೊಬ್ಬ ಕನ್ನಡಿಗನಿಗೆ ಆರ್ಥಿಕ ಮತ್ತು ಸಾಮಾಜಿಕ ಭದ್ರತೆ ಕಲ್ಪಿಸಲಾಗುವುದು ಎಂದು ನೆನ್ನೆ ದಿನ ಭಾಷಣ ಮಾಡಿದ್ದಾರೆ. ಆದರೆ ವಾಸ್ತವದಲ್ಲಿ ಮಾತ್ರ ಕನ್ನಡಿಗರ ಪಾಲಿನ ಉದ್ಯೋಗವನ್ನು ಕಿತ್ತುಕೊಂಡು ಸಾಮಾಜಿಕವಾಗಿ ಅಭದ್ರತೆ ಸೃಷ್ಟಿಸಿ, ಆರ್ಥಿಕ ಸ್ವಾವಲಂಬನೆಯ ಬೇರುಗಳನ್ನು ಕತ್ತರಿಸುತ್ತಿದೆ ಎಂದು ಕಿಡಿಕಾರಿದ್ದಾರೆ.