Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು : ಜಗದೀಶ್ ಶೆಟ್ಟರ್ ಅವರನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ. ನಾನು ಕರ್ನಾಟಕದ ರಾಜಕಾರಣಕ್ಕೆ ಬರುವುದಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆಯ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಪಬ್ಲಿಕ್ ಟಿವಿ ಮುಖ್ಯಸ್ಥ ಎಚ್ಆರ್ ರಂಗನಾಥ್ ಜೊತೆ ಸಂದರ್ಶನದಲ್ಲಿ ಮಾತನಾಡಿದ ಅವರು, ನಾನು ಪ್ರಧಾನಿ ನರೇಂದ್ರ ಮೋದಿ ಕೆಳಗೆ ಕೆಲಸ ಮಾಡುವುದಕ್ಕೆ ಖುಷಿ ಇದೆ. ಯಾವುದೇ ಕಾರಣಕ್ಕೂ ರಾಜ್ಯ ರಾಜಕೀಯಕ್ಕೆ ಬರುವುದಿಲ್ಲ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಿತ್ರ ಶೆಟ್ಟರ್ ಅವರನ್ನು ಮನವೊಲಿಸಲು ಯಾಕೆ ಸಾಧ್ಯವಾಗಿಲ್ಲ ಎಂಬ ಪ್ರಶ್ನೆಗೆ, ನಾವು ಬಹಳಷ್ಟು ಪ್ರಯತ್ನ ಪಟ್ಟೆವು. ಆದರೆ ಅವರು ಈ ಬಾರಿ ಚುನಾವಣೆಗೆ ನಿಲ್ಲಲೇಬೇಕು ಎಂದು ಹಠ ಹಿಡಿದಿದ್ದರು. ಯಾಕೆ ಅಷ್ಟೊಂದು ಹಠ ಹಿಡಿದಿದ್ದಾರೆ ಎಂಬುದನ್ನು ತಿಳಿಯಲು ನನಗೆ ಸಾಧ್ಯವಾಗಲಿಲ್ಲ ಎಂದು ಉತ್ತರಿಸಿದರು.
ಶೆಟ್ಟರ್ ಈಗಲೂ ನನ್ನ ಒಳ್ಳೆಯ ಸ್ನೇಹಿತ. ರಾಜಕೀಯವಾಗಿ ಗೆಳೆಯನನ್ನು ಕಳೆದುಕೊಂಡಿದ್ದೇನೆ. ಆದರೆ ಒಂದು ದಿನ ಶೆಟ್ಟರ್ ತಮ್ಮ ನಿರ್ಧಾರಕ್ಕೆ ಪಶ್ಚಾತ್ತಾಪ ಪಡುತ್ತಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.