Publish Date: Fri, 05 Jun 2020 (16:18 IST)
Updated Date: Fri, 05 Jun 2020 (16:20 IST)
ಸಿದ್ದರಾಮಯ್ಯನವರ ಸ್ವಾರ್ಥ ರಾಜಕಾರಣದಿಂದ ಮತ್ತು ಕಾಂಗ್ರೆಸ್ ಮೋಸ ಮಾಡಿದ್ದರಿಂದಲೇ ನಾವು ಪಕ್ಷ ಬಿಟ್ಟಿದ್ದು ಎಂದು ಬಿಜೆಪಿ ಸಚಿವರೊಬ್ಬರು ಆರೋಪಿಸಿದ್ದಾರೆ.
ಸಿದ್ದರಾಮಯ್ಯ ಸರಿಯಾಗಿ ಆಡಳಿತ ನಿರ್ವಹಣೆ ಮಾಡದಿದ್ದರಿಂದಲೇ ಅಂತಹ ಸನ್ನಿವೇಶ ಸೃಷ್ಟಿಯಾಯಿತು. ರಾಜ್ಯದಲ್ಲಿ ಈ ಹಿಂದೆ ಸಿದ್ದರಾಮಯ್ಯ ಸಿಎಂ ಇದ್ದಾಗಲೂ ರಾಕೇಶ್ ಸೂಪರ್ ಸಿಎಂ ಆಗಿದ್ದರು. ಕೆಂಪಯ್ಯ ಗೃಹಸಚಿವ ಎಂಬ ಮಾತುಗಳಿದ್ದವು. ಈಗಲೂ ಸಹ ಅದೇ ರೀತಿಯಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ಬಗ್ಗೆ ಆರೋಪಿಸಲಾಗುತ್ತಿದೆ. ಆಪಾದನೆಯಲ್ಲಿ ಯಾವುದೇ ಹುರುಳಿಲ್ಲ. ಇದೊಂದು ನಿರಾಧಾರ ಆರೋಪ. ರಾಜಕೀಯ ಕಾರಣಕ್ಕಾಗಿ ಸಿದ್ದರಾಮಯ್ಯ ಆರೋಪಿಸುತ್ತಿದ್ದಾರೆಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಚುನಾವಣೆ ಸಮಯದಲ್ಲಿ ನಮ್ಮ ಗೆಲುವಿಗಾಗಿ ಕುಟುಂಬ ಸದಸ್ಯರೆಲ್ಲರೂ ದುಡಿದಿರುತ್ತಾರೆ. ಹೀಗಾಗಿ ಕೆಲವೊಂದು ಸಲಹೆ, ಸೂಚನೆ ಕೊಡುತ್ತಾರೆ. ಹಾಗೆಂದ ಮಾತ್ರಕ್ಕೆ ಅವರೇ ನಮ್ಮ ಪರವಾಗಿ ಆಡಳಿತ ನಡೆಸುತ್ತಿದ್ದಾರೆಂದು ಹೇಳುವುದು ಸರಿಯಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರೂ ಬೇಕಾದರೂ ಸಲಹೆ ನೀಡಬಹುದು. ಅದನ್ನು ಸ್ವೀಕಾರ ಮಾಡಬಹುದು ಅಥವಾ ಬಿಡುವ ಅಧಿಕಾರ ಜನಪ್ರತಿನಿಧಿಗಳಿಗೆ ಇದೆ.
ಆರ್.ಶಂಕರ್, ಎಂಟಿಬಿ ನಾಗರಾಜ, ವಿಶ್ವನಾಥ ತ್ಯಾಗ ಮಾಡಿದ್ದರಿಂದಲೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಅವರಿಗೆ ಸಿಎಂ ಬಿಎಸ್ವೈ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಾರೆ. ಎಂಟಿಬಿಯವರಿಗೆ ಬಚ್ಚೇಗೌಡ ಕುಟುಂಬದಿಂದ ಅನ್ಯಾಯ ಆಗಿರುವುದು ನಿಜ. ಚುನಾವಣೆಯಲ್ಲಿ ಶರತ್ ಬಚ್ಚೇಗೌಡ ಸ್ಪರ್ಧೆ ಮಾಡದಂತೆ ಪಕ್ಷ ಸೂಚಿಸಿದರೂ ಸ್ಪರ್ಧೆ ಮಾಡಿದ್ದರಿಂದ ನಾಗರಾಜ ಸೋಲಬೇಕಾಯಿತು. ಯಡಿಯೂರಪ್ಪ ಅದನ್ನು ಸರಿಪಡಿಸುತ್ತಾರೆ ಎಂದರು.