Publish Date: Mon, 23 Feb 2026 (16:32 IST)
Updated Date: Mon, 23 Feb 2026 (16:37 IST)
ಬೆಂಗಳೂರು: ಕೇಂದ್ರ ಸರ್ಕಾರಕ್ಕೆ ಮನ್ರೇಗಾ ಯೋಜನೆಯನ್ನು ರದ್ದುಪಡಿಸುವ ಅಗತ್ಯವೇ ಇರಲಿಲ್ಲ. ಇದನ್ನು ಮರುಸ್ಥಾಪಿಸಲು ಹೋರಾಡುವುದೇ ಕಾಂಗ್ರೆಸ್ ಗುರಿಯಾಗಿರಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇಂದು ಕಾಂಗ್ರೆಸ್ ಮನ್ರೇಗಾ ಉಳಿಸಿ ಹೋರಾಟ ಸಮಾವೇಶವನ್ನು ಆಯೋಜಿಸಿತ್ತು. ಈ ವೇಳೆ ಮಾತನಾಡಿದ ಅವರು ಮನ್ರೇಗಾ ಯೋಜನೆ ಹೆಸರು ಬದಲಿಸಿ ವಿಬಿ ರಾಮ್ ಜಿ ಎಂದು ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪನೆಯಾಗುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ.
ದೇಶಾದ್ಯಂತ ಮನರೇಗಾವನ್ನು ಉಳಿಸಿ ಅಭಿಯಾನ ಪ್ರಾರಂಭಿಸಲಾಗಿದೆ. ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಎನ್ಡಿಎ ಸರ್ಕಾರ ಮನರೇಗಾವನ್ನು ರದ್ದುಪಡಿಸಿ, ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ಜಾರಿ ಮಾಡಿದೆ. ಮನರೇಗಾದ ರದ್ದತಿ ಅಗತ್ಯವೇ ಇರಲಿಲ್ಲ. ಕೂಲಿಕಾರರು, ಆದಿವಾಸಿಗಳು, ಸಣ್ಣರೈತರಿಗೆ, ಮಹಿಳೆಯರಿಗೆ ಉದ್ಯೋಗದ ಅನುಕೂಲ ಕಲ್ಪಿಸುವ ದಿಸೆಯಲ್ಲಿ 2005 ರಲ್ಲಿ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ, ನಮ್ಮ ನಾಯಕಿ ಸೋನಿಯಾ ಗಾಂಧಿ ಅವರ ಮಾರ್ಗದರ್ಶನದಲ್ಲಿ ಈ ಕಾಯ್ದೆ ಜಾರಿಯಾಯಿತು. ಇದೇ ಕಾಯ್ದೆಯಲ್ಲದೇ, ಶಿಕ್ಷಣ, ಆಹಾರ, ಮಾಹಿತಿ ಹಕ್ಕು ಸೇರಿದಂತೆ ಹಲವು ಜನಪರ ಕಾಯ್ದೆಗಳನ್ನು ಜಾರಿಗೆ ತಂದಿದ್ದರು. ಆದರೆ ಈ ಎಲ್ಲ ಜನಪರ ಕಾಯ್ದೆಗಳನ್ನು ದುರ್ಬಲಗೊಳಿಸುವ ಕೆಲಸವನ್ನು ಮೋದಿಯವರ ನೇತೃತ್ವದ ಸರ್ಕಾರ ಮಾಡುತ್ತಿದೆ.
ಸದನದಲ್ಲಿ ಕೇವಲ 8 ಗಂಟೆಗಳ ಕಾಲ ಚರ್ಚೆ ಮಾಡಿದ ಕೇಂದ್ರ ಸರ್ಕಾರ, ನಂತರ ಹೊಸ ಕಾಯ್ದೆಯನ್ನು ಜಾರಿಗೆ ತಂದಿದೆ. ಮನರೇಗಾ ಕಾಯ್ದೆ ಇಂದ 12.16 ಕೋಟಿ ಜನರು ಕೆಲಸ ಪಡೆಯುತ್ತಿದ್ದರು. ಇದರಲ್ಲಿ ಸುಮಾರು 53% ಮಹಿಳೆಯರು ಉದ್ಯೋಗ ಪಡೆಯುತ್ತಿದ್ದರು. ಅಲ್ಲದೇ ಪರಿಶಿಷ್ಟ ಜಾತಿಯ 17% ಮತ್ತು ಪರಿಶಿಷ್ಟ ವರ್ಗದ 11% ಜನರು ಕೆಲಸ ಮಾಡುತ್ತಿದ್ದರು. ಇಂದು ಈ ಎಲ್ಲ ಜನರ ಹಕ್ಕುಗಳನ್ನು ಕಸಿದುಕೊಳ್ಳಲಾಗಿದೆ.
ಮನರೇಗಾ ಕಾಯ್ದೆಗೆ ಗ್ರಾಮ ಸ್ವರಾಜ್ಯದ ಕನಸು ಕಂಡಿದ್ದ ಮಹಾತ್ಮ ಗಾಂಧಿಯವರ ಹೆಸರನ್ನು ಇಡಲಾಗಿತ್ತು. ಅವರ ಗ್ರಾಮ ಸ್ವರಾಜ್ಯದ ಕಲ್ಪನೆಗೆ ಮನರೇಗಾ ಶಕ್ತಿ ತುಂಬಿತ್ತು. 100 ದಿನಗಳ ಉದ್ಯೋಗದ ಖಾತ್ರಿ ನೀಡುತ್ತಿದ್ದ ಮನರೇಗಾ ಕಾಯ್ದೆಯಡಿ, ಕೂಲಿಕಾರರು ತಮ್ಮ ಸ್ಥಳೀಯ ಮಟ್ಟದಲ್ಲಿಯೇ ಕೆಲಸ ಮಾಡಬಹುದಿತ್ತು. ಕೆಲಸದ ಸ್ಥಳವನ್ನು ಗ್ರಾಮಪಂಚಾಯತಿ ಮತ್ತು ಗ್ರಾಮಸಭೆಗಳಿಗೆ ನಿರ್ಧರಿಸುವ ಅಧಿಕಾರವಿತ್ತು. ಆದರೀಗ ಈ ನಿರ್ಧಾರವನ್ನು ಕೇಂದ್ರ ಸರ್ಕಾರವೇ ಕೈಗೊಳ್ಳಲಿದೆ. ಕೇಂದ್ರದ ಅನುದಾನ, ಅನುಮತಿ ಇಲ್ಲದೇ, ಇಲ್ಲಿನ ಗ್ರಾಮ ಪಂಚಾಯತಿಯಲ್ಲಿ ಕೆಲಸವಾಗಲು ಅಸಾಧ್ಯ.
ಆದ್ದರಿಂದ ಮನರೇಗಾವನ್ನು ಮುಂದುವರೆಸಬೇಕೆಂಬುದು ಕಾಂಗ್ರೆಸ್ ಪಕ್ಷದ ಒತ್ತಾಯವಾಗಿದೆ.
ಮನರೇಗಾದಲ್ಲಿ 100 ದಿನ ಭತ್ಯೆಯನ್ನು ತಪ್ಪದೇ ಕೊಡಲಾಗುತ್ತಿತ್ತು. ಹೊಸ ಕಾಯ್ದೆಯಂತೆ ಕೇಂದ್ರ 60% ಅನುದಾನ ಮತ್ತು ರಾಜ್ಯಗಳು 40% ಅನುದಾನ ಕೊಡಬೇಕಾಗಿದೆ. ರಾಜ್ಯದ ಹಿತವನ್ನು ಕಾಪಾಡುವಲ್ಲಿ ಕೇಂದ್ರ ಸೋತಿದೆ. ಅದ್ದರಿಂದ ವಿಬಿ ಜಿ ರಾಮ್ ಜಿ ರದ್ದುಪಡಿಸಿ, ಮನರೇಗಾ ವನ್ನು ಮರುಸ್ಥಾಪಿಸಲು ದೇಶಾದ್ಯಂತ ಕಾಂಗ್ರೆಸ್ ಪಕ್ಷ ಹೋರಾಟ ಮಾಡುತ್ತಿದೆ ಎಂದಿದ್ದಾರೆ.