Publish Date: Thu, 14 Oct 2021 (20:31 IST)
Updated Date: Thu, 14 Oct 2021 (20:34 IST)
ಕಳೆದೊಂದು ವಾರದಿಂದ ನಿರಂತರ ಸುರಿಯುತ್ತಿರುವ ಮಳೆಯಿಂದ ಸಿಲಿಕಾನ್ ಸಿಟಿ ತತ್ತರಿಸಿ ಹೋಗಿದೆ. ಗುರುವಾರ ನಗರದಲ್ಲಿ ಸುರಿದ ಮಳೆಗೆ ಮಡಿವಾಳ ಕೆರೆ ತುಂಬಿ ಹರಿದಿದೆ.
ಮಡಿವಾಳ ಕೆರೆ ತುಂಬಿರುವುದರಿಂದ ಬಿಟಿಎಂ ಲೇಔಟ್, ಎಚ್ಎಸ್ಆರ್ ಲೇಔಟ್, ಅನುಗ್ರಹ ಲೇಔಟ್, ಮತ್ತು ಮಡಿವಾಳ ಪ್ರದೇಶಗಳು ಸೇರಿದಂತೆ ಹಲವು ಪ್ರದೇಶಗಳಿಗೆ ನೀರು ನುಗ್ಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.
ಈ ಮಧ್ಯೆ ಮುಂದಿನ ಮೂರು ದಿನಗಳ ಕಾಲ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ:
ಸಿಲಿಕಾನ್ ಸಿಟಿಯಲ್ಲಿ ಸೋಮವಾರದಿಂದ ನಿರಂತರವಾಗಿ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ ನಗರದಲ್ಲಿ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ. ನಗರದಲ್ಲಿ ಸುರಿದ ಧಾರಾಕಾರ ಮಳೆಯಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎಎಲ್) ಸೇರಿದಂತೆ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ವಿಮಾನ ನಿಲ್ದಾಣಕ್ಕೆ ಹೋಗುವ ರಸ್ತೆಯಲ್ಲಿ ನೀರು ನಿಂತು ಪ್ರಯಾಣಿಕರು ವಿಮಾನ ನಿಲ್ದಾಣ ತಲುಪಲು ಕಷ್ಟವಾಯಿತು. ಪ್ರಯಾಣಿಕರನ್ನು ವಿಮಾನ ನಿಲ್ದಾಣದ ಹೊರಗೆ ಟ್ರಾಕ್ಟರ್ನಲ್ಲಿ ಸಾಗಿಸಲಾಯಿತು. ಭಾರೀ ಮಳೆಯಿಂದಾಗಿ, ಬೆಂಗಳೂರಿನ ಕೋನಪ್ಪನ ಅಗ್ರಹಾರ ವ್ಯಾಪ್ತಿಯಲ್ಲಿ ಪ್ರವಾಹಕ್ಕೆ ಸಿಲುಕಿದ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಓರ್ವ ಮೃತಪಟ್ಟಿದ್ದಾನೆ.