Publish Date: Wed, 10 Jul 2019 (12:53 IST)
Updated Date: Wed, 10 Jul 2019 (12:57 IST)
ಬೆಂಗಳೂರು : ಮೈತ್ರಿ ಸರ್ಕಾರದ ಹಲವು ಶಾಸಕರು ರಾಜೀನಾಮೆ ನೀಡಿದ್ದರೂ ಕೂಡ ಸ್ಪೀಕರ್ ರಮೇಶ್ ಕುಮಾರ್ ಅವರು ಇನ್ನೂ ಶಾಸಕರ ರಾಜೀನಾಮೆಯನ್ನು ಅಂಗೀಕಾರ ಮಾಡಿಲ್ಲ. ಈ ಹಿನ್ನಲೆಯಲ್ಲಿ ಸ್ಪೀಕರ್ ರಮೇಶ್ ಕುಮಾರ್ ಅವರ ಕಾರ್ಯವೈಖರಿ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಮೈತ್ರಿ ಸರ್ಕಾರ ತಾಂತ್ರಿಕವಾಗಿ ಬಹುಮತ ಕಳೆದುಕೊಂಡಿರುವ ಪರಿಣಾಮ ಮುಖ್ಯಮಂತ್ರಿ ಕುಮಾರಸ್ವಾಮಿ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿಯ 105 ಶಾಸಕರು ವಿಧಾನಸೌಧದ ಗಾಂಧಿ ಚೌಕದ ಎದುರು ಧರಣಿ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ ಅವರು ಸ್ಪೀಕರ್ ರಮೇಶ್ ಕುಮಾರ್ ಅವರ ಮೇಲೆ ಕಿಡಿಕಾರಿದ್ದಾರೆ.
“ಎಲ್ಲಾ ಪಕ್ಷದವರೂ ಸರ್ವಾನುಮತದಿಂದ ಕೆ.ಆರ್. ರಮೇಶ್ ಅವರನ್ನು ಸ್ಪೀಕರ್ ಆಗಿ ಆಯ್ಕೆ ಮಾಡಿದ್ದೇವೆ. ಆದರೆ, ಅವರು ಕಾನೂನುಬದ್ಧವಾಗಿ ಕೆಲಸ ಮಾಡುತ್ತಿಲ್ಲ. ಅತೃಪ್ತ ಶಾಸಕರ ರಾಜೀನಾಮೆಯನ್ನು ಅಂಗೀಕರಿಸಲು ವಿಳಂಬ ಮಾಡುತ್ತಿದ್ದಾರೆ. ಇದು ಸರಿಯಲ್ಲ. ಕ್ರಮಬದ್ಧವಲ್ಲದ ರಾಜೀನಾಮೆ ನೀಡಿದವರು ಮತ್ತೊಮ್ಮೆ ಬಂದು ಸರಿಯಾದ ಮಾದರಿಯಲ್ಲಿ ರಾಜೀನಾಮೆ ಸಲ್ಲಿಸುತ್ತಾರೆ. ಆದರೆ, ರಾಜೀನಾಮೆಗಳು ಕ್ರಮಬದ್ಧವಾಗಿದೆ ಎಂದು ಅವರೇ ಹೇಳಿರುವ ರಾಜೀನಾಮೆಗಳನ್ನಾದರೂ ಕೂಡಲೇ ಕಾನೂನು ಬದ್ಧಬವಾಗಿ ಅಂಗೀಕಾರ ಮಾಡಲಿ" ಎಂದು ಹೇಳಿದ್ದಾರೆ.