Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಜಮೀನು ಖಾತೆ ಬದಲಾವಣೆ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬೆಳಗಾವಿ ಜಿಲ್ಲೆಯ ಕಿತ್ತೂರು ತಹಶೀಲ್ದಾರ್ ಮತ್ತು ಕೇಸ್ ವರ್ಕರ್ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. 2 ಲಕ್ಷ ರೂ. ಸ್ವೀಕರಿಸುತ್ತಿದ್ದಾಗ ರೆಡ್ಹ್ಯಾಂಡ್ ಆಗಿ ಸಿಕ್ಕಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಹಶೀಲ್ದಾರ್ ಸೋಮಲಿಂಗಪ್ಪ ಹಲಗಿ ಹಾಗೂ ಕೇಸ್ ವರ್ಕರ್ ಪ್ರಸನ್ನG ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಿತ್ತೂರು ತಾಲೂಕಿನ ಖೊದಾನಪೂರ ಗ್ರಾಮದ ಬಾಪುಸಾಹೇಬ ಇನಾಮದಾರ ಎಂಬುವವರು ತಮ್ಮ 10 ಎಕರೆ ಜಮೀನಿನ ಖಾತೆ ಬದಲಾವಣೆಗೆ ಅರ್ಜಿ ಸಲ್ಲಿಸಿದ್ದರು. ಈ ವೇಳೆ ಕಿತ್ತೂರು ತಹಶೀಲ್ದಾರ್ 5 ಲಕ್ಷ ರೂ. ಲಂಚದ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಬಾಪುಸಾಹೇಬ್ ಪುತ್ರ ರಾಜೇಂದ್ರ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ಸಲ್ಲಿಸಿದರು. ದೂರು ಸ್ವೀಕರಿಸಿದ ಲೋಕಾಯುಕ್ತ ಅಧಿಕಾರಿಗಳು ಕಿತ್ತೂರು ತಹಶೀಲ್ದಾರ್ ಮನೆಯಲ್ಲಿಯೇ ಜಮೀನಿನ ಖಾತೆ ಬದಲಾವಣೆ ಮಾಡಲು 2 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ದಾಳಿ ಮಾಡಿದ್ದಾರೆ. ಎರಡು ಲಕ್ಷ ಹಣ ಮತ್ತು ಶ್ಯೂರಿಟಿಗಾಗಿ 20 ಲಕ್ಷ ಮೌಲ್ಯದ ಖಾಲಿ ಚೆಕ್ ಅನ್ನು ಲೋಕಾಯುಕ್ತ ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಬೆಳಗಾವಿ SP ಯಶೋಧಾ ವಂಟಗೂಡಿ ಮಾರ್ಗದರ್ಶನದಲ್ಲಿ ತನಿಖಾಧಿಕಾರಿಯಾಗಿ ಅಪೂರ್ಣ ಹುಲಗೂರ ತಂಡದ ಸಿಬ್ಬಂದಿ ಭಾಗಿಯಾಗಿದ್ದಾರೆ.