Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಎಲ್ಲ ಮುಜರಾಯಿ ದೇವಾಲಯಗಳ ಆಸ್ತಿಗಳನ್ನು ಯಾವುದೇ ಲೋಪಗಳಿಗೆ ಎಡೆಮಾಡಿಕೊಡದಂತೆ ಸಂರಕ್ಷಿಸುವುದು ಕಾರ್ಯನಿರ್ವಾಹಣ ಅಧಿಕಾರಿಗಳ ಜವಾಬ್ದಾರಿ ಎಂದು ಅಧಿಕಾರಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ, ಹಿಂದೂ ಧಾರ್ಮಿಕ ಮತ್ತು ಧರ್ಮರಾಯ ದತ್ತಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಲಾಖೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ದೇವಾಲಯಗಳ ಸರ್ವೇ ಕಾರ್ಯ ಕೈಗೊಂಡು, ಗಡಿ ಗುರುತಿಸಿ, ಬೇಲಿ ಹಾಕಿ ರಕ್ಷಿಸಲು ಕೂಡಲೇ ಕಾರ್ಯಪ್ರವೃತ್ತರಾಗಬೇಕು ಎಂದು ಸೂಚಿಸಿದರು.
ಒತ್ತುವರಿ ಆಗಿರುವ ಹಲವಾರು ದೇವಾಲಯಗಳ ಜಾಗವನ್ನು ತೆರವುಗೊಳಿಸಿ, ಸ್ಥಳೀಯವಾಗಿ ಯಾವುದೇ ಅಡೆತಡೆಗಳು ಇದ್ದಲ್ಲಿ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಕಾರ್ಯದಲ್ಲಿ ಯಾವುದೇ ಲೋಪ ಕಂಡುಬಂದಲ್ಲಿ ಅಂತಹ ಅಧಿಕಾರಿಯ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಪಿ. ಆರ್ ರಮೇಶ್, ರಮೇಶ್ ಗೌಡ, ರವಿಕುಮಾರ್ ಹಾಗೂ ಅ. ದೇವೇಗೌಡ ಅವರು, ಜಿಲ್ಲಾಧಿಕಾರಿಗಳಾದ ಜೆ ಮಂಜುನಾಥ್, ಇಲಾಖೆಯ ಆಯುಕ್ತರಾದ ರೋಹಿಣಿ ಸಿಂಧೂರಿ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರು ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.