Publish Date: Wednesday, 16 February 2022 (12:07 IST)
Updated Date: Wednesday, 16 February 2022 (12:32 IST)
ಬೆಂಗಳೂರು : ಖ್ಯಾತ ಕವಿ ಚನ್ನವೀರ ಕಣವಿ ಅವರು ಕೋವಿಡ್ ಸೋಂಕಿಗೆ ತುತ್ತಾಗಿದ್ದರು.
ಅವರನ್ನು ಜ.14ರಂದು ಧಾರವಾಡದ ಎಸ್ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ನಾಯಕರು ಸಂತಾಪವನ್ನು ಸೂಚಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿ, ನಾಡು ಕಂಡಂತಹ ಅತ್ಯಂತ ಸೃಜನಶೀಲ ಸಾಹಿತ್ಯ ರಚನೆಕಾರರು, ಚಂಬೆಳಕಿನ ಕವಿ, ನಾಡೋಜ ಶ್ರೀ ಚೆನ್ನವೀರ ಕಣವಿ ಅವರು ನಿಧನರಾದ ವಿಷಯ ತಿಳಿದು ತುಂಬಾ ದುಃಖಿತನಾಗಿದ್ದೇನೆ.
ಸಾಹಿತ್ಯದ ಮುಖಾಂತರ ಅವರು ತಮ್ಮ ಕಲ್ಪನೆ ಹಾಗೂ ವಾಸ್ತವಾಂಶವನ್ನು ಪರಿಣಾಮಕಾರಿಯಾಗಿ ಬಿಂಬಿಸಿದ ಕವಿ ಆಗಿದ್ದರು. ಪ್ರಶಸ್ತಿಗಳಿಗೆ ಗೌರವ ಬರುವ ವ್ಯಕ್ತಿತ್ವ ಅವರದಾಗಿತ್ತು.
ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ಬಹುದೊಡ್ಡ ಹಾನಿಯಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗು ಅವರ ಕುಟುಂಬ ವರ್ಗಕ್ಕೆ ಈ ನೋವನ್ನು ಭರಿಸುವ ಶಕ್ತಿ ನೀಡಲಿಯೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದರು.
ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸಂತಾಪವನ್ನು ಸೂಚಿಸಿದ್ದು, ಕನ್ನಡ ಕಾವ್ಯಲೋಕದ ಚೆಂಬೆಳಕಾಗಿದ್ದ, ಸೌಹಾರ್ದತೆಯನ್ನು ಸಾರುತ್ತಾ ಸಮನ್ವಯ ಕವಿ ಎಂದೇ ಖ್ಯಾತರಾಗಿದ್ದ ಕವಿ ಚೆನ್ನವೀರ ಕಣವಿ ಅವರ ನಿಧನದಿಂದ ಅತೀವ ದು:ಖಕ್ಕೀಡಾಗಿದ್ದೇನೆ. ಅವರ ಕುಟುಂಬ ವರ್ಗದ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಎಂದು ಹೇಳಿದರು.