Publish Date: Mon, 13 Aug 2018 (15:29 IST)
Updated Date: Mon, 13 Aug 2018 (15:32 IST)
ಸಂವಿಧಾನದ ಪ್ರತಿ ಸುಟ್ಟವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದಲಿತ ಸಂಘಟನೆಗಳಿಂದ ಪ್ರತಿಭಟನೆ ನಡೆದಿದೆ.
ದೆಹಲಿಯ ಜಂತರ್ ಮಂತರ್ ನಲ್ಲಿ ಸಂವಿಧಾನದ ಪ್ರತಿಯನ್ನು ಸುಟ್ಟವರ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ರಸ್ತೆಯಲ್ಲಿ ಟೈರ್ ಸುಟ್ಟು ಪ್ರತಿಭಟನೆ ನಡೆಸಿದ ಘಟನೆ ಬೆಂಗಳೂರು ಹೊರವಲಯ ಆನೇಕಲ್ ನಲ್ಲಿ ನಡೆದಿದೆ. ಆನೇಕಲ್ ಪಟ್ಟಣದ ರಾಘವೇಂದ್ರ ವೃತ್ತದಿಂದ ಬಸ್ ನಿಲ್ದಾಣದವರೆಗೂ ಪಂಜಿನ ಮೆರವಣಿಗೆ ನಡೆಸಿದ ದಲಿತಪರ ಸಂಘಟನೆಗಳ ಕಾರ್ಯಕರ್ತರು, ಬಸ್ ನಿಲ್ದಾಣದ ಬಳಿ ರಸ್ತೆಯಲ್ಲಿ ಟೈರ್'ಗೆ ಬೆಂಕಿ ಹಚ್ಚಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸಂವಿಧಾನದ ಪ್ರತಿ ಸುಟ್ಟ ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸಬೇಕು. ಇಲ್ಲವಾದಲ್ಲಿ ಇನ್ನು ಉಗ್ರ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು. ಇತ್ತೀಚಿನ ದಿನಗಳಲ್ಲಿ ದೇಶದಾದ್ಯಂತ ದಲಿತರ ಮೇಲೆ ಹಲ್ಲೆಗಳು ಹೆಚ್ಚಾಗುತ್ತಿವೆ. ಇದರ ಜೊತೆಗೆ ಸಂವಿಧಾನದ ಪ್ರತಿಯನ್ನು ಸುಟ್ಟು ವಿಕೃತಿ ಮೆರೆದಿದ್ದು, ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ದಲಿತರು ಯುದ್ಧದ ಮಾದರಿಯಲ್ಲಿ ದಂಗೆಯೆದ್ದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಇನ್ನು ರಾಜ್ಯದಲ್ಲಿ ಸಂವಿಧಾನದ ಪ್ರತಿ ಸುಟ್ಟ ಕೃತ್ಯವನ್ನು ಇದುವರೆಗೆ ದಲಿತ ಶಾಸಕರಾಗಲಿ ಸಂಸದರಾಗಲಿ ಅಥವಾ ಪರಿಷತ್ ಸದಸ್ಯರಾಗಲಿ ಖಂಡನೆ ವ್ಯಕ್ತಪಡಿಸಿಲ್ಲ. ಇದೆ ರೀತಿ ಮೌನವಾಗಿದ್ದರೆ ಮುಂದಿನ ದಿನಗಳಲ್ಲಿ ದಲಿತ ರಾಜಕಾರಣಿಗಳ ಮನೆ ಮುಂದೆ ಧರಣಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.