Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಬಿಜೆಪಿ ಸರಕಾರವು ಒಂದು ವರ್ಷವನ್ನು ಪೂರ್ಣಗೊಳಿಸುತ್ತಿರುವ ಸಂದರ್ಭದಲ್ಲಿ ನಾವು ರಾಜ್ಯಾದ್ಯಂತ ಜು. 28ರಿಂದ ಎಲ್ಲ ಜಿಲ್ಲೆಗಳಲ್ಲಿ ಜನೋತ್ಸವವನ್ನು ಹಮ್ಮಿಕೊಂಡಿದ್ದೇವೆ. ಇದರ ಸಂಬಂಧ ಮೊದಲ ಕಾರ್ಯಕ್ರಮ ಜು.28ರಂದು ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ ಎಂದು ರಾಜ್ಯದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ತಿಳಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ 'ಜಗನ್ನಾಥ ಭವನ'ದಲ್ಲಿ ಇಂದು ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಜೆಪಿ ಆಡಳಿತದ ಮೂರು ವರ್ಷ ಮತ್ತು ಬೊಮ್ಮಾಯಿ ನೇತೃತ್ವದ ಸರಕಾರದ ಒಂದು ವರ್ಷವನ್ನು ಜನೋತ್ಸವವಾಗಿ ರಾಜ್ಯದಾದ್ಯಂತ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ನಮ್ಮ ಇಂಧನ ಇಲಾಖೆಯಲ್ಲಿ ಒಂದು ವರ್ಷದ ಅವಧಿಯಲ್ಲಿ ಹೊಸ ಹೊಸ ಯೋಜನೆಗಳನ್ನು ಜನರಿಗೆ ತಲುಪಿಸಲಾಗಿದೆ. ಬೆಳಕು ಯೋಜನೆಯಡಿ ವಿದ್ಯುತ್ ಸಂಪರ್ಕ ಇಲ್ಲದ ಮನೆಗಳಿಗೆ ವಿದ್ಯುತ್ ಸಂಪರ್ಕ ಕೊಡಲಾಗಿದೆ. ಪರಿಶಿಷ್ಟ ಜಾತಿ, ಪಂಗಡದವರಿಗೆ 75 ಯೂನಿಟ್ ಉಚಿತ ವಿದ್ಯುತ್ ಕೊಡುವ ಪ್ರಕ್ರಿಯೆ ಪ್ರಾರಂಭವಾಗಿದೆ. ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಟ್ರಾನ್ಸ್ ಫಾರ್ಮರ್ ನಿರ್ವಹಣಾ ಅಭಿಯಾನವನ್ನು ಹಮ್ಮಿಕೊಂಡಿದ್ದು, ಒಂದು ವಾರದಲ್ಲಿ ಸುಮಾರು 3.5 ಲಕ್ಷದಿಂದ 4 ಲಕ್ಷ ಟ್ರಾನ್ಸ್ ಫಾರ್ಮರ್ ನಿರ್ವಹಣೆ ಮಾಡಲಾಗಿದೆ ಎಂದು ವಿವರಿಸಿದರು.
ಸುಟ್ಟು ಹೋದ ಟಿ.ಸಿ.ಗಳನ್ನು 24 ಗಂಟೆಯೊಳಗೆ ಬದಲಿಸಬೇಕೆಂಬ ದೊಡ್ಡ ಪ್ರಯತ್ನ ಕರ್ನಾಟಕದ ಇತಿಹಾಸದಲ್ಲಿ ಮೊದಲ ಬಾರಿಗೆ ಆರಂಭಿಸಿದ್ದು, ಒಂದು ವರ್ಷದಲ್ಲಿ ಪ್ರಗತಿಯನ್ನು ನಮ್ಮ ಇಲಾಖೆ ಮೂಲಕ ಕಾಣುತ್ತಿದ್ದೇವೆ. ಬೆಂಗಳೂರಿನಲ್ಲಿ ಒಕ್ಕುಪೆನ್ಸಿ ಸರ್ಟಿಫಿಕೇಟ್ ಇಲ್ಲದೆ ವಿದ್ಯುತ್ ಸಂಪರ್ಕ ಇಲ್ಲ ಎಂಬ ತಪ್ಪು ನಿರ್ಧಾರವನ್ನು ಹಿಂದಿನ ಕಾಂಗ್ರೆಸ್ ಮಾಡಿತ್ತು. ಅದನ್ನು ಸರಿಪಡಿಸಿ 5 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ವಿದ್ಯುತ್ ಸಂಪರ್ಕ ಕೊಡುವ ಪ್ರಯತ್ನ ಮಾಡಲಾಗಿದೆ ಎಂದರು.