Publish Date: Wed, 31 Aug 2022 (07:46 IST)
Updated Date: Tue, 30 Aug 2022 (23:50 IST)
ನವದೆಹಲಿ : “ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಯಥಾ ಸ್ಥಿತಿ ಕಾಯ್ದುಕೊಳ್ಳಿ. ವಿವಾದ ಇತ್ಯರ್ಥಕ್ಕೆ ಮತ್ತೆ ಹೈಕೋರ್ಟ್ಗೆ ಹೋಗಿ” – ಇದು ಸುಪ್ರೀಂ ನೀಡಿದ ಆದೇಶದ ಸಾರ.
ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿಸಬೇಕಾ ಬೇಡ್ವಾ ಅನ್ನೋ ವಿಚಾರಕ್ಕೆ ಸುಪ್ರೀಂಕೋರ್ಟ್ನಲ್ಲಿ ನಡೆದ ವಿಚಾರಣೆ ಭಾರೀ ಕುತೂಹಲಕ್ಕೆ ಎಡೆಮಾಡಿಕೊಟ್ಟಿತ್ತು. ಕೊನೆಗೆ ಸುಪ್ರೀಂ ಕೋರ್ಟ್ ಈದ್ಗಾ ಮೈದಾನದಲ್ಲಿ ಯಥಾ ಸ್ಥಿತಿ ಕಾಯ್ದುಕೊಳ್ಳಿ ಎಂದು ಆದೇಶ ಪ್ರಕಟಿಸಿತು.
ಚಾಮರಾಜಪೇಟೆ ಮೈದಾನದ ಗಣೇಶೋತ್ಸವ ಆಚರಣೆ ಅನುಮತಿ ನೀಡುವುದು ಸರ್ಕಾರದ ವಿವೇಚನೆಗೆ ಬಿಟ್ಟ ವಿಚಾರ ಎಂದು ಹೈಕೋರ್ಟ್ ದ್ವಿಸದಸ್ಯ ಪೀಠ ನೀಡಿದ ಆದೇಶವನ್ನು ಪ್ರಶ್ನಿಸಿ ವಕ್ಫ್ ಬೋರ್ಡ್ ಸುಪ್ರೀಂ ಮೆಟ್ಟಿಲೇರಿತ್ತು.
ಮೊದಲು ಈ ಅರ್ಜಿಯ ವಿಚಾರಣೆ ನ್ಯಾ. ಹೇಮಂತ್ ಗುಪ್ತಾ ಮತ್ತು ನ್ಯಾ. ಸುಧಾಂಶು ಧುಲಿಯಾ ಅವರಿದ್ದ ದ್ವಿಸದಸ್ಯ ಪೀಠದಲ್ಲಿ ಮಧ್ಯಾಹ್ನ ಸುಮಾರು ಒಂದೂವರೆ ಗಂಟೆ ಕಾಲ ವಿಚಾರಣೆ ನಡೆಯಿತು.
ಆದರೆ ಗಣೇಶೋತ್ಸವಕ್ಕೆ ಅನುಮತಿಸಬೇಕಾ ಬೇಡ್ವಾ ಎಂಬ ವಿಚಾರವಾಗಿ ನ್ಯಾಯಮೂರ್ತಿಗಳಲ್ಲೇ ಭಿನ್ನ ಅಭಿಪ್ರಾಯಗಳು ವ್ಯಕ್ತವಾದ ಕಾರಣ, ಪ್ರಕರಣ ವಿಚಾರಣೆಯನ್ನು ಮುಖ್ಯ ನ್ಯಾಯಾಧೀಶರ ಪೀಠಕ್ಕೆ ವರ್ಗಾವಣೆ ಮಾಡಿದರು.