Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ನವದೆಹಲಿ : ಶಿವಲಿಂಗ ಪತ್ತೆಯಾದ ಜಾಗವನ್ನು ರಕ್ಷಿಸಬೇಕು ಎಂದು ಸುಪ್ರೀಂ ಕೋರ್ಟ್ ವಾರಣಾಸಿ ಜಿಲ್ಲಾಡಳಿತಕ್ಕೆ ಸೂಚಿಸಿದೆ.
ಜ್ಞಾನವ್ಯಾಪಿ ಮಸೀದಿಯಲ್ಲಿ ಸರ್ವೆ ನಡೆಸಲು ತಡೆ ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟ್ ನ್ಯಾ. ಚಂದ್ರಚೂಡ್ ಮತ್ತು ನ್ಯಾ. ಪಿ.ಎಸ್ ನರಸಿಂಹ ಅವರಿದ್ದ ಪೀಠದಲ್ಲಿ ನಡೆಯಿತು. ವಿಚಾರಣೆ ಸಂದರ್ಭದಲ್ಲಿ ಶಿವಲಿಂಗ ನಿಜವಾಗಿ ಎಲ್ಲಿ ಪತ್ತೆಯಾಗಿದೆ ಎಂದು ಕೋರ್ಟ್ ಪ್ರಶ್ನಿಸಿತು.
ಈ ಪ್ರಶ್ನೆಗೆ ಉತ್ತರ ನೀಡಿದ ಉತ್ತರಪ್ರದೇಶ ಸರ್ಕಾರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ನಾವು ನೋಡಿಲ್ಲ ಎಂದು ಉತ್ತರಿಸಿದರು. ವರದಿಯನ್ನು ನೋಡಿ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.
ವಿಚಾರಣೆ ನಡೆಸಿದ ಕೋರ್ಟ್, ಶಿವಲಿಂಗ ಪತ್ತೆಯಾದ ಜಾಗವನ್ನು ರಕ್ಷಿಸಬೇಕು. ನಮಾಜ್ ಮಾಡಲು ಆಗಮಿಸುವ ಮುಸ್ಲಿಮರಿಗೆ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ಕೋರ್ಟ್ ವಾರಣಾಸಿ ಜಿಲ್ಲಾಡಳಿತಕ್ಕೆ ಸೂಚಿಸಿತು. ಕೋರ್ಟ್ ವಿಚಾರಣೆಯನ್ನು ಮೇ 19ಕ್ಕೆ ಮುಂದೂಡಿದೆ.