Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ನವದೆಹಲಿ : ಕೇಂದ್ರ ಸರ್ಕಾರ ಸಹಕಾರ ನೀಡುತ್ತಿದ್ದರೂ ಮುಂದಿನ 24 ತಿಂಗಳಿನಲ್ಲಿ ಸರಿಯಾಗಿ ಕೆಲಸ ಮಾಡದೇ ಇದ್ದರೆ ಬಿಎಸ್ಎನ್ಎಲ್ ಉದ್ಯೋಗಿಗಳು ಸ್ವಯಂ ನಿವೃತ್ತಿ ತೆಗೆದುಕೊಂಡು ಮನೆಗೆ ಹೋಗುತ್ತಾರೆ ಎಂದು ಟೆಲಿಕಾಂ ಸಚಿವ ಅಶ್ವಿನಿ ವೈಷ್ಣವ್ ಎಚ್ಚರಿಕೆ ನೀಡಿದ್ದಾರೆ.
ಮುಖ್ಯ ಜನರಲ್ ಮ್ಯಾನೇಜರ್ಗಳೊಂದಿಗಿನ ಸಭೆಯಲ್ಲಿ ವೈಷ್ಣವ್, ಸರ್ಕಾರ ಬಿಎಸ್ಎನ್ಎಲ್ ಹಿಂದೆ ಬಂಡೆಯಾಗಿ ನಿಂತಿದ್ದು, ಕೆಲಸ ಮಾಡುತ್ತಿರುವ 62 ಸಾವಿರ ಉದ್ಯೋಗಿಗಳಿಂದ ಅದೇ ಮಟ್ಟದ ಬದ್ಧತೆಯನ್ನು ನಿರೀಕ್ಷಿಸುತ್ತಿದೆ.
ನಾನು ಪ್ರತಿ ತಿಂಗಳು ಕಾರ್ಯಕ್ಷಮತೆಯ ಫಲಿತಾಂಶವನ್ನು ಪರಿಶೀಲಿಸುತ್ತೇನೆ. ಕೆಲಸ ಮಾಡದಿರುವವರು ವಿಆರ್ಎಸ್ ತೆಗೆದುಕೊಂಡು ಮನೆಗೆ ಹೋಗಬಹುದು ಎಂದು ಖಡಕ್ ಆಗಿಯೇ ಹೇಳಿದ್ದಾರೆ.
ಸಭೆಯಲ್ಲಿ ಉದ್ಯೋಗಿಗಳಿಗೆ perform or perish ಆಯ್ಕೆ ನೀಡಿದ ಸಚಿವರು, ವಿಆರ್ಎಸ್ ತೆಗೆದುಕೊಳ್ಳಲು ಹಿಂಜರಿಯುವವರಿಗೆ 56(ಜೆ) ನಿಯಮ ಪ್ರಯೋಗಿಸಿ ಕಡ್ಡಾಯ ನಿವೃತ್ತಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಕಳಪೆ ಕಾರ್ಯಕ್ಷಮತೆಯ ಆಧಾರದ ಮೇಲೆ ಭಾರತೀಯ ರೈಲ್ವೆಯ ಸುಮಾರು 70 ಅಧಿಕಾರಿಗಳಿಗೆ ಕೆಲಸ ತೊರೆಯುವಂತೆ ಸೂಚಿಸಲಾಗಿದೆ ಎಂದು ಉಲ್ಲೇಖಿಸಿದರು. ಬಿಎಸ್ಎನ್ಎಲ್ಗೆ 1.64 ಲಕ್ಷ ಕೋಟಿ ರೂ. ಪ್ಯಾಕೇಜ್ ಘೋಷಣೆ ಮಾಡಿದ ಬೆನ್ನಲ್ಲೇ ಕೇಂದ್ರ ಈಗ ಉದ್ಯೋಗಿಗಳಿಗೆ ಖಡಕ್ ಸಂದೇಶವನ್ನು ರವಾನಿಸಿದೆ.