Publish Date: Sat, 23 Apr 2022 (13:59 IST)
Updated Date: Sat, 23 Apr 2022 (15:10 IST)
ಬೆಂಗಳೂರು : ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ ಹಿನ್ನೆಲೆಯಲ್ಲಿ ಸಿಐಡಿ ತನಿಖೆ ಪೂರ್ಣಗೊಂಡ ನಂತರ 402 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಪರೀಕ್ಷೆ ಮಾಡಲಾಗುವುದು ಎಂದು ಡಿಜಿಪಿ ಪ್ರವೀಣ್ ಸೂದ್ ತಿಳಿಸಿದರು.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸಿಐಡಿಯಿಂದ ಪ್ರಸ್ತುತ ತನಿಖೆ ಪೂರ್ಣಗೊಂಡ ತಕ್ಷಣ 402 ಪಿಎಸ್ಐ ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುವುದು.
ತಪ್ಪಿತಸ್ಥರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಅವರನ್ನು ಪ್ರಸ್ತುತ ಪಟ್ಟಿಯಿಂದ ಹೊರಗಿಡಲಾಗಿದೆ ಎಂದು ತಿಳಿಸಿದ್ದಾರೆ.
ಖಾಲಿಯಿರುವ 402 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಭರ್ತಿಗೆ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಅರ್ಜಿ ಆಹ್ವಾನಿಸಿತ್ತು. ಇದರಲ್ಲಿ ಪುರುಷರು ಮತ್ತು ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದ್ದು, ಕಲ್ಯಾಣ ಕರ್ನಾಟಕ ಪ್ರದೇಶವರಿಗೆ ಪ್ರತ್ಯೇಕ ಮೀಸಲಾತಿ ವ್ಯವಸ್ಥೆ ಕಲ್ಪಿಸಲಾಗಿತ್ತು.
ಒಟ್ಟು 402 ಹುದ್ದೆಗಳ ಪೈಕಿ 26 ಹುದ್ದೆಗಳು ಕಲ್ಯಾಣ ಕರ್ನಾಟಕಕ್ಕೆ ಮೀಸಲಾಗಿದ್ದು, ಉಳಿದ 376 ಹುದ್ದೆಗಳಿಗೆ ಕಲ್ಯಾಣ ಕರ್ನಾಟಕದವರೂ ಸೇರಿದಂತೆ ಕರ್ನಾಟಕದ ಯಾವುದೇ ಪ್ರದೇಶದವರು ಅರ್ಜಿ ಸಲ್ಲಿಸಬಹುದಾಗಿತ್ತು.
ಆದರೆ ಅಕ್ಟೋಬರ್ನಲ್ಲಿ ನಡೆದ ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಬಂದಿದೆ. ಈ ಹಿನ್ನೆಲೆಯಲ್ಲಿ ಪಿಎಸ್ಐ ಹುದ್ದೆಗಳ ಭರ್ತಿಯನ್ನು ಮುಂದೂಡಲಾಗಿದೆ.